ವಿಜಯಪುರ: ಫೆಬ್ರವರಿಯಲ್ಲಿ ಬಜೆಟ್ ಮಂಡಿಸುವ ಪೂರ್ವದಲ್ಲಿ ರಾಜ್ಯ ಸರ್ಕಾರ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಸಮಗ್ರ ಅನುಷ್ಠಾನ ಹೋರಾಟ ಸಮಿತಿ ಹಾಗೂ ಎಲ್ಲಾ ಮಾದಿಗ ಸಂಘಟನೆ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮುಖಂಡ ಸಾಯಿಕುಮಾರ ಬಿಸನಾಳ ಮಾತನಾಡಿ, ‘ಕಳೆದ 20 ವರ್ಷಗಳಿಂದ ರಾಜ್ಯದಲ್ಲಿ ಮಾದಿಗ ಸಮಾಜ ಒಳ ಮೀಸಲಾತಿಗಾಗಿ ಹಲವಾರು ರೀತಿಯ ಹೋರಾಟಗಳನ್ನು ನಡೆಸಿದರೂ ಪ್ರಯೋಜನವಾಗಿಲ್ಲ’ ಎಂದು ಕಿಡಿಕಾರಿದರು.
‘ಪರಿಶಿಷ್ಟರಲ್ಲೇ ಪರಿಶಿಷ್ಟರ ವಿರೋಧಿ ಶಾಸಕ ನರೇಂದ್ರಸ್ವಾಮಿ ಹಾಗೂ ಅವರ ಹಿಂಬಾಲಕ ಶಾಸಕರ ದುಷ್ಟ ಆಲೋಚನೆಗಳಿಗೆ ಮನ್ನಣೆ ನೀಡದೇ, ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ಸೌಲಭ್ಯ ವಂಚಿತ ಮಾದಿಗ ಸಮಾಜಕ್ಕೆ ಅನುಕೂಲ ಮಾಡಿಕೊಡಲು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಇಲ್ಲದಿದ್ದರೇ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುವುದು ಅನಿವಾರ್ಯವಾಗುವುದು’ ಎಂದು ಎಚ್ಚರಿಸಿದರು.
ನಾಗೇಂದ್ರ ಮಾಯವಂಶಿ, ಹಣಮಂತ ಬಿರಾದಾರ, ಸಂಗು ಕಾರಜೋಳ, ಬಿ.ಸಿ.ತಳವಾರ, ಎಚ್.ಪ್ರಭಾಕರ, ಮುತ್ತು ಸಾಸನೂರ, ಮಲ್ಲಿಕಾರ್ಜುನ ಹಳಿಮನಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.