ADVERTISEMENT

‘ಪಾರದರ್ಶಕ ಆಡಳಿತ ನೀಡುವ ಮಹತ್ವಾಕಾಂಕ್ಷೆ’

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 7:27 IST
Last Updated 7 ಫೆಬ್ರುವರಿ 2018, 7:27 IST

ವಿಜಯಪುರ: ‘ಕಾನೂನಿನ ಚೌಕಟ್ಟಿನಡಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಜತೆ, ಅಧಿಕಾರಿ ವರ್ಗದ ತೊಂದರೆ ನಿವಾರಣೆ ಮತ್ತು ಪಾರದರ್ಶಕ ಆಡಳಿತ ದೊರಕಿಸುವ ಮಹತ್ವಾಕಾಂಕ್ಷೆ ಹೊಂದಿರುವೆ’ ಎಂದು ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ‘ಆಡಳಿತದಲ್ಲಿ ಸುಧಾರಣೆ ತರುವ ಮೂಲಕ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ತಲುಪಿಸುವ ಉದ್ದೇಶ ಹೊಂದಿದ್ದು, ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವಂತೆ’ ಇದೇ ಸಂದರ್ಭ ಸೂಚಿಸಿದರು.

‘ಈಗಾಗಲೇ ರಾಜ್ಯದ 26 ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಆಡಳಿತ ವ್ಯವಸ್ಥೆ ಬಲಪಡಿಸುವ ಉದ್ದೇಶ ಹೊಂದ ಲಾಗಿದೆ. ಕೇಂದ್ರ, ರಾಜ್ಯ ಸರ್ಕಾರ ವ್ಯಾಪ್ತಿಯ ವಿವಿಧ ಕಾರ್ಯಕ್ರಮಗಳ ಲಾಭ ಜನರಿಗೆ ತಲುಪುವಂತಾಗಬೇಕು.

ADVERTISEMENT

ಜನರಿಗಾಗಿ ಜಾರಿಗೊಳಿಸಿರುವ ಸುಧಾರಣಾ ಕ್ರಮಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಅಧಿಕಾರಿಗಳ ಮೇಲಿರುವುದರಿಂದ, ಸರ್ಕಾರಿ ಕೆಲಸ ದೇವರ ಕೆಲಸವೆಂದು ಭಾವಿಸಿ, ಶ್ರದ್ಧೆಯಿಂದ ಸೇವೆ ಸಲ್ಲಿಸಿ ವಿವಿಧ ಯೋಜನೆಗಳ ಪ್ರಯೋಜನವನ್ನು ಜನರಿಗೆ ತಲುಪಿಸಿ’ ಎಂದು ಖಡಕ್‌ ಸೂಚನೆ ನೀಡಿದರು.

‘ಪದವಿ ಪೂರ್ವ ಕಾಲೇಜು ಫಲಿತಾಂಶದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಮುಂಬರುವ ನಾಲ್ಕು ವಾರದ ಅವಧಿಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ, ಫಲಿತಾಂಶ ಸುಧಾರಣೆ, ಶೂನ್ಯ ಫಲಿತಾಂಶವಿರುವ ಕಾಲೇಜುಗಳ ಮಾಹಿತಿ, ವಿಷಯವಾರು ವಿದ್ಯಾರ್ಥಿಗಳ ಅನುತ್ತೀರ್ಣ ಮಾಹಿತಿ ಕುರಿತು ವರದಿ ಸಲ್ಲಿಸಬೇಕು.

ಮಕ್ಕಳ ಭವಿಷ್ಯಕ್ಕಾಗಿ ಮುಂಬರುವ ದಿನಗಳಲ್ಲಿ ಫಲಿತಾಂಶ ಸುಧಾರಣೆಗೆ ಹೆಚ್ಚಿನ ಗಮನ ನೀಡಬೇಕು. ಶಿಕ್ಷಕರನ್ನು ಸೂಕ್ತ ತರಬೇತಿಗೊಳಿಸಬೇಕು. ಅದರಂತೆ ಪ್ರೌಢಶಾಲೆ ವ್ಯಾಪ್ತಿಯಲ್ಲಿಯೂ ಫಲಿತಾಂಶ ಕಡಿಮೆ ಬಂದಿರುವ ಶಾಲೆಗಳ ಬಗ್ಗೆ ಸೂಕ್ತ ನಿಗಾ ವಹಿಸಿ’ ಎಂದು ಡಿಡಿಪಿಯು, ಡಿಡಿಪಿಐಗೆ ಸೂಚಿಸಿದರು.

‘ಅರ್ಹ ಅಂಗವಿಕಲರಿಗೆ ಪಿಂಚಣಿ ದೊರೆಯಬೇಕು. ಅಂಗವೈಕಲ್ಯದ ದೃಢೀಕರಣ ಪ್ರಮಾಣ ಪತ್ರವನ್ನು ಮಾನದಂಡ ಅನುಸರಿಸಿ ವಿತರಿಸಬೇಕು. ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಆಹಾರ ಧಾನ್ಯ ದುರ್ಬಳಕೆಯಾಗದಂತೆ ನಿಗಾ ವಹಿಸಬೇಕು.

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನೀಡಲಾಗುತ್ತಿರುವ ಟ್ಯಾಕ್ಸಿ ಸೌಲಭ್ಯ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಫಲಾನುಭವಿಗಳನ್ನು ಆಯ್ಕೆ ಮಾಡಿ ವರದಿ ಸಲ್ಲಿಸಬೇಕು. ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕೋಳಿ ಸಾಕಣೆಗೆ ಉತ್ತೇಜನ ನೀಡಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ, ಲೋಕಾಯುಕ್ತ ಎಡಿಜಿಪಿ ಸಂಜೀವ ಸಹಾಯ, ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಎಂ.ಬಿ.ಸಂಕದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಸುಂದರೇಶಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‌ಕುಮಾರ್‌ ಆರ್‌.ಜೈನ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.