ADVERTISEMENT

3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಸೂಚನೆ

ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಕುರಿತು ಅಧಿಕಾರಿಗಳೊಂದಿಗೆ ಸಚಿವ ಎಂ.ಬಿ.ಪಾಟೀಲ ಸಭೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 14:35 IST
Last Updated 20 ಜನವರಿ 2025, 14:35 IST
ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಕುರಿತು ಬೆಂಗಳೂರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಕುರಿತು ಬೆಂಗಳೂರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು   

ವಿಜಯಪುರ: ‘ಜಿಲ್ಲೆಯ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, ₹457 ಕೋಟಿ ಬಿಡುಗಡೆ ಮಾಡಬೇಕು’ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ, ಭೂಸ್ವಾಧೀನ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಈ ಯೋಜನೆಯಿಂದ 52,700 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಲ್ಲಿ 37,200 ಎಕರೆ ಜಮೀನು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲೇ ಇದೆ. ಈಗಾಗಲೇ ವಿತರಣಾ ಕಾಲುವೆ, ಉಪಕಾಲುವೆ, ಹೊಲಗಾಲುವೆ ಕಾಮಗಾರಿಗಳೆಲ್ಲ ಮುಗಿದು ನೀರು ಹರಿಯುತ್ತಿದೆ. ಇದರ ಪ್ರಯೋಜನ ರೈತರಿಗೂ ಆಗುತ್ತಿದೆ’ ಎಂದು ಹೇಳಿದರು.

ADVERTISEMENT

‘ಈ ಯೋಜನೆಗೆ ಅಗತ್ಯ ಜಮೀನು ಬಿಟ್ಟು ಕೊಡುವಂತೆ ರೈತರಿಗೆ ಮನವಿ ಮಾಡಿಕೊಂಡಿದ್ದೆ. ರೈತರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಅಂಥವರಿಗೆ ಈಗ ಪರಿಹಾರ ಹಣ ನೀಡಲು ಸಬೂಬು ಹೇಳುತ್ತಿರುವುದು ಸರಿಯಲ್ಲ. ಆದಷ್ಟು ಬೇಗ ಪ್ರಕ್ರಿಯೆ ಮುಗಿಯಬೇಕು’ ಎಂದು ಸೂಚಿಸಿದ್ದಾರೆ.

‘ಭೂಸ್ವಾಧೀನಾಧಿಕಾರಿ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇದೆ. ಇದನ್ನು  ಸಹಿಸುವುದಿಲ್ಲ. ತಾಂತ್ರಿಕ ವಿಷಯಗಳ ನೆಪವೊಡ್ಡಿ ರೈತರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ’ ಎಂದರು.

ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮಿನಬಾವಿ,  ನಿಗಮದ ಮುಖ್ಯ ಆಡಳಿತಾಧಿಕಾರಿ ಔದರಂ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಸೂಪರಿಂಟೆಂಡೆಂಟ್ ಎಂಜಿನಿಯರ್ ಬಿ.ಎ.ನಾಗರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.