ವಿಜಯಪುರ:ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಬೆಡ್ ದೊರೆಯುವಂತೆ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಬೆಡ್ಗಳಿಗಾಗಿ ಅನಗತ್ಯವಾಗಿ ಪರದಾಡುವಂತಾಗಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೊ ಸಂವಾದ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಕೆಪಿಎಂನಲ್ಲಿ ನೋಂದಾಣಿಯಾದ ಬೆಡ್ಗಳ ಬಗ್ಗೆ ಗಮನ ಹರಿಸಿ, ಪೂರೈಸಲಾದ ಬೆಡ್ಗಳನ್ನು ಗುರುತಿಸಿ ಅವುಗಳ ಸಂಪೂರ್ಣ ಪಟ್ಟಿಮಾಡಿಟ್ಟುಕೊಳ್ಳಿ. ಇದರಿಂದ ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಜೊತೆಗೆರೋಗಿಗಳಿಗೂ ಅನಗತ್ಯ ಗೊಂದಲ ಉಂಟಾಗುವುದಿಲ್ಲ ಎಂದರು.
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ಸೂಕ್ತ ನಿರ್ವಹಣೆಯೊಂದಿಗೆ ಆಕ್ಸಿಜನ್, ವೆಂಟಿಲೇಟರ್ ಅಗತ್ಯ ವ್ಯವಸ್ಥೆಯನ್ನೂ ಮಾಡಿಟ್ಟುಕೊಂಡಿರಬೇಕು.ಬೆಡ್ ಮ್ಯಾನೇಜ್ಮೆಂಟ್ನಲ್ಲಿ ಯಾವುದೇ ಲೋಪ ಹಾಗೂ ಸಮಸ್ಯೆಗಳಾಗದಂತೆ ಕ್ರಮಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ತಾಲ್ಲೂಕು ಹಂತದಲ್ಲಿ ತಹಶೀಲ್ದಾರ್ ಹಾಗೂ ಇಒಗಳು ಇನ್ನಷ್ಟು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ರೋಗಿಗಳನ್ನು ತಾಲ್ಲೂಕಾಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಕಳುಹಿಸುವಾಗ ಬಹಳ ಗಮನ ಹಾಗೂ ಎಚ್ಚರಿಕೆ ವಹಿಸಿ, ಗಂಭೀರ ಹಾಗೂ ಅಗತ್ಯವೆನಿಸಿದರೆ ಮಾತ್ರ ಕಳುಹಿಸಿಕೊಡಬೇಕು. ಸಾಧ್ಯವಾದರೆ ತಾಲ್ಲೂಕಾಸ್ಪತ್ರೆಯಲ್ಲಿಯೇ ಚಿಕಿತ್ಸೆಗೊಳಪಡಿಸಬೇಕು ಎಂದು ಸೂಚಿಸಿದರು.
ಕೋವಿಡ್ ಪಾಸಿಟಿವ್ ವರದಿ ಬಂದ ಪ್ರತಿ ರೋಗಿಯ ಸಂಪೂರ್ಣ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳಬೇಕು. ಅಂತಹ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದ ಬಗ್ಗೆಯೂ ಮಾಹಿತಿ ಕಲೆ ಹಾಕಬೇಕು. ಹಾಗೆಯೇ ಕೂಡಲೇ ಅವರಿಗೆ ಅಗತ್ಯ ಚಿಕಿತ್ಸೆ ಒದಗಿಸಬೇಕು. ಈ ಬಗ್ಗೆ ಪೋರ್ಟಲ್ನಲ್ಲೂ ವಿವರ ದಾಖಲಿಸಬೇಕು ಎಂದರು.
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಕೂಡಲೇ ಕ್ರಮಕೈಗೊಳ್ಳಬೇಕು.ಹಾಗೆಯೇ, ಸರ್ಕಾರದಿಂದ ಮಂಜೂರಾದ ಚಿಕ್ಕಮಕ್ಕಳ ಆಸ್ಪತ್ರೆಗಳ ನಿರ್ಮಾಣ ಹಾಗೂ ಅದರ ಸೂಕ್ತ ನಿರ್ವಹಣೆ ಕಾರ್ಯಕ್ಕೂ ಕ್ರಮಕೈಗೊಳ್ಳಬೇಕು. ಇದರಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದು ಸೂಚಿಸಿದರು.
ಹೋಮ್ ಐಸೋಲೇಶನ್ ರೋಗಿಗಳಿಗೆ ಕಾಲಕಾಲಕ್ಕೆ ಸೂಕ್ತ ಚಿಕಿತ್ಸೆ ಒದಗಿಸುವುದರ ಜೊತೆಗೆ ಅಗತ್ಯವಿದ್ದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಬೇಕು ಎಂದರು.
ಜಿಲ್ಲೆಯ ಗಡಿಭಾಗಗಳ ಚೆಕ್ಪೋಸ್ಟ್ಗಳಲ್ಲಿ ಟೆಸ್ಟಿಂಗ್ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಪ್ರಯಾಣಿಕರ ಆರ್ಟಿಪಿಸಿಆರ್ ನೆಗೆಟಿವ್ ಟೆಸ್ಟ್ ವರದಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಕೋವಿಡ್ ಲಕ್ಷಣ ಕಂಡುಬಂದ ವ್ಯಕ್ತಿಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಸೂಚಿಸಿದರು.
ಚಹಾ ಅಂಗಡಿ, ಬೇಕರಿಗಳಂತಹ ಆಹಾರ, ದಿನಸಿ ಮಾರಾಟದ ಅಂಗಡಿಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾ ಆಗದಂತೆ ಎಚ್ಚರಿಕೆ ವಹಿಸಬೇಕು. ಪಾರ್ಸಲ್ ವ್ಯವಸ್ಥೆಗೆ ಅವಕಾಶ ಕಲ್ಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ, ಬಲರಾಮ ಲಮಾಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ಧಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಕುಮಾರ ಯರಗಲ್, ಮಹೇಶ ನಾಗರಬೆಟ್ಟ, ಡಬ್ಲ್ಯು ಎಚ್ ಒ ಪ್ರತಿನಿಧಿ ಮುಕುಂದ ಗಲಗಲಿ ಸಭೆಯಲ್ಲಿ ಉಪಸ್ಥಿತರಿದ್ದರು.
****
ಕೋವಿಡ್ ಮೂರನೇ ಅಲೆಯ ಸಮರ್ಪಕ ನಿಯಂತ್ರಣಕ್ಕಾಗಿ ಸಮರೋಪಾದಿಯಲ್ಲಿ ಸಕಲ ರೀತಿಯ ಅಗತ್ಯ ಕ್ರಮಕೈಗೊಳ್ಳಬೇಕು.
–ಪಿ.ಸುನೀಲ್ ಕುಮಾರ್,ಜಿಲ್ಲಾಧಿಕಾರಿ, ವಿಜಯಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.