ADVERTISEMENT

ಕನ್ನಡ ನಾಮಫಲಕ ಅಳವಡಿಕೆ: ಜಾಗೃತಿ ಜಾಥಾ

ಕನ್ನಡ ನಾಮಫಲಕಗಳನ್ನು ಅಳವಡಿಸಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 16:02 IST
Last Updated 20 ಅಕ್ಟೋಬರ್ 2024, 16:02 IST
ವಿಜಯಪುರ ಜಿಲ್ಲೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳೊಂದಿಗೆ ಭಾನುವಾರ ಜಾಗೃತಿ ಜಾಥಾ ನಡೆಯಿತು 
ವಿಜಯಪುರ ಜಿಲ್ಲೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳೊಂದಿಗೆ ಭಾನುವಾರ ಜಾಗೃತಿ ಜಾಥಾ ನಡೆಯಿತು    

ವಿಜಯಪುರ: ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಸೇರಿದಂತೆ ಖಾಸಗಿ ಕಚೇರಿ, ಶಾಲೆ, ಆಸ್ಪತ್ರೆ ಅಂಗಡಿ ಮುಂಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಪಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳೊಂದಿಗೆ ಭಾನುವಾರ ಜಾಗೃತಿ ಜಾಥಾ ನಡೆಯಿತು.

ನಗರದ ಸೋಲಾಪುರ ರಸ್ತೆಯಲ್ಲಿರುವ ಬಂಜಾರಾ ಕ್ರಾಸ್‌ನಿಂದ ಆರಂಭಿಸಿ ಶಿವಾಜಿ ಸರ್ಕಲ್ ಮಾರ್ಗವಾಗಿ ಗಾಂಧಿ ವೃತ್ತದವರೆಗೂ ಜಾಥಾ ನಡೆಯಿತು.

‘ಸರ್ಕಾರದ ಆದೇಶದಂತೆ ನಾಮಫಲಕಗಳು ಶೇ 60ರಷ್ಟು ಕನ್ನಡ ಭಾಷೆ ಒಳಗೊಂಡಿರಬೇಕು. ಶೇ 40ರಷ್ಟು ಉಳಿದ
ಭಾಷೆಗಳನ್ನು ಬಳಸಲು ಅವಕಾಶವಿದ್ದು, ಅ. 30ರೊಳಗೆ ಜಿಲ್ಲೆಯ ಎಲ್ಲ ನಾಮಫಲಕಗಳು ಕನ್ನಡ ಭಾಷೆಯನ್ನು ಒಳಗೊಂಡಿರಬೇಕು. ಅ. 31ರ ನಂತರ ಕನ್ನಡ ಭಾಷೆ ಒಳಗೊಳ್ಳದ ನಾಮಫಲಕಗಳನ್ನು ಮುಟ್ಟುಗೊಲು ಹಾಕಿ, ಸಂಬಂಧಿಸಿದ ಅಂಗಡಿ, ಸಂಸ್ಥೆಗಳ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ವಹಿಸಲಾಗುವುದು’ ಎಂದು ಅವರು ಹೇಳಿದರು.

ADVERTISEMENT

‘ಕನ್ನಡ ನಾಮಫಲಕ ನಿಯಮಗಳ ಉಲ್ಲಂಘನೆಗಾಗಿ ಯಾವುದೇ ಕೈಗಾರಿಕೆ, ಅಂಗಡಿ, ವಾಣಿಜ್ಯ ಸಂಸ್ಥೆಯ ಮಾಲೀಕರಿಗೆ ಮೊದಲನೇ ಅಪರಾಧಕ್ಕಾಗಿ ₹ 5 ಸಾವಿರ ದಂಡ, ನಂತರದ ಎರಡನೇ ಅಪರಾಧಕ್ಕಾಗಿ ₹ 10 ಸಾವಿರದವರಗೆ ವಿಸ್ತರಿಸಬಹುದಾದ ದಂಡ, ನಂತರ ಪ್ರತಿಯೊಂದು ಅಪರಾಧಕ್ಕಾಗಿ ₹ 20 ಸಾವಿರದವರೆಗೆ ದಂಡ ಮತ್ತು ಪರವಾನಗಿ ರದ್ದುಪಡಿಸಲಾಗುವುದು’ ಎಂದರು.

ಕನ್ನಡ ನಾಮಫಲಕ ಅಳವಡಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿ, ಅ. 31ರೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಎಚ್ಚರಿಕೆ ನೀಡಲಾಯಿತು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ನಗರಾಭಿವೃದ್ಧಿ ಇಲಾಖೆ ಆಯಕ್ತ ರಾಜಶೇಖರ ಡಂಬಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೋಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ಅಧಿಕಾರಿ ನಿಂಗಪ್ಪ ಗೋಠೆ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಜಂತ್ರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪಾ ಎಲ್., ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಸೈನಿಕ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವಿನುತಾ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ, ಪಿಯು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ. ಹೊಸಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.