ವಿಜಯಪುರ: ಚರಂಡಿ ಕಾಮಗಾರಿ ಮಾಡಬೇಕಿದ್ದ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಲು ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಜೊತೆಯಲ್ಲಿ ಹೋಗಿದ್ದ ತಾಲ್ಲೂಕು ಪಂಚಾಯಿತಿ ಸದಸ್ಯೆ ಚೈತ್ರಾ ಅವರ ಪತಿ ವೀರೇಗೌಡ ಅವರ ತಲೆಗೆ ಅದೇ ಗ್ರಾಮದ ಪುನೀತ್ ಎಂಬಾತ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ವೆಂಕಟೇನಹಳ್ಳಿಯಲ್ಲಿ ಚರಂಡಿ ಕಾಮಗಾರಿ ಮಾಡುವ ಜಾಗದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವವರಿಗೆ ಹಲವು ಬಾರಿ ನೋಟಿಸ್ ಜಾರಿಗೊಳಿಸಲಾಗಿತ್ತು. ಬುಧವಾರ ಒತ್ತುವರಿ ತೆರವುಗೊಳಿಸಲಿಕ್ಕೆ ಹೋದ ಸಂದರ್ಭದಲ್ಲಿ ಪುನೀತ್ ಎಂಬಾತ ವೀರೇಗೌಡ ಅವರೊಟ್ಟಿಗೆ ವಾಗ್ವಾದ ನಡೆಸಿದ್ದಾನೆ. ಈ ವೇಳೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಖಂಡನೆ: ಜನಪ್ರತಿನಿಧಿಗಳು ಅಭಿವೃದ್ಧಿ ಕೆಲಸ ಕೈಗೊಳ್ಳುವಾಗ ರಾಜಕೀಯ ಹಾಗೂ ವೈಯಕ್ತಿಕ ದ್ವೇಷ ಇಟ್ಟುಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸುವುದು ಖಂಡನೀಯ. ಇಂತಹ ಕೃತ್ಯಗಳು ನಡೆಯದಂತೆ ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪಿ. ಅನಂತಕುಮಾರಿಚಿನ್ನಪ್ಪ ಖಂಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.