ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 4:50 IST
Last Updated 28 ಫೆಬ್ರುವರಿ 2026, 4:50 IST
ವಿಜಯಪುರದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ವಿಜಯಪುರದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.   

ವಿಜಯಪುರ: ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಹಾಗೂ ರಾಜ್ಯ ಸರ್ಕಾರದ ಗೌರವಧನವನ್ನು ಒಟ್ಟುಗೂಡಿಸಿ ಮಾಸಿಕ ₹ 15,000 ಗೌರವಧನ ನೀಡಬೇಕು ಮತ್ತು ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕುವ ಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಆಶಾ ಸಂಘಟನೆಯ ಜಿಲ್ಲಾ ಸಂಚಾಲಕ ಎಚ್.ಟಿ. ಭರತಕುಮಾರ ಮಾತನಾಡಿ, 2025ರ ಜನವರಿಯಲ್ಲಿ ನಡೆದ ಅಹೋರಾತ್ರಿ ಹೋರಾಟದ ವೇಳೆ ಮುಖ್ಯಮಂತ್ರಿಗಳು ಮಾಸಿಕ ಕನಿಷ್ಠ ₹10,000 ಗ್ಯಾರಂಟಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಅದು ಇಂದಿಗೂ ಜಾರಿಯಾಗಿಲ್ಲ ಎಂದು ಹೇಳಿದರು. 2025ರ ಮಾರ್ಚ್ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳಮಾಡಿದಂತೆ ಆಶಾ ಕಾರ್ಯಕರ್ತೆಯರಿಗೂ ₹1,000 ಹೆಚ್ಚಳ ಮಾಡುವುದಾಗಿ ಹೇಳಿದ್ದರಾದರೂ ಆಶಾ ಕಾರ್ಯಕರ್ತೆಯರಿಗೆ ಮಾತ್ರ ಹೆಚ್ಚಳ ಮಾಡಲೇ ಇಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ₹5,000 ಗೌರವಧನವನ್ನು ₹8,000ಕ್ಕೆ ಏರಿಸುವುದಾಗಿ ಹೇಳಿ, ಅಧಿಕಾರಕ್ಕೆ ಬಂದ ನಂತರ ಅದನ್ನು ಮರೆತಿದ್ದಾರೆ ಎಂದು ಆರೋಪಿಸಿದರು.

ಮುಖಂಡರಾದ ಅಂಬಿಕಾ ಒಳಸಂಗ ಮಾತನಾಡಿ, ಆಶಾ ಸುಗಮಕಾರರನ್ನು ಕೈಬಿಡುವುದು ಕೇಂದ್ರ ಮಾರ್ಗಸೂಚಿಗೆ ವಿರುದ್ಧವಾಗಿದೆ. ಹತ್ತು ವರ್ಷಗಳಿಂದ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿದ ಸುಗಮಕಾರರನ್ನು ಮರುನೇಮಕ ಮಾಡುವ ಭರವಸೆ ಈವರೆಗೂ ಈಡೇರಿಲ್ಲ ಎಂದು ತಿಳಿಸಿದರು. ಕೇಂದ್ರದ ಪ್ರೋತ್ಸಾಹಧನ ಕೂಡ ಪೂರ್ಣವಾಗಿ ಲಭಿಸುತ್ತಿಲ್ಲ. ಹೀಗಾಗಿ ಆಶಾ ಕಾರ್ಯಕರ್ತೆಯರ ಎಲ್ಲಾ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕೆಂದು ಒತ್ತಾಯಿಸಿದರು.

ADVERTISEMENT

ಆಶಾ ಮುಖಂಡರಾದ ನಿರ್ಮಲಾ ಬೀರಬ್ಬಿ, ಸುಮಂಗಲಾ ಪಡಸಲಗಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಆಶಾ ಮುಖಂಡರುಗಳಾದ ಗೀತಾ ಬಂಗಾರತಾಳ, ಜ್ಯೋತಿ, ಮೈರುನ್ನಿಸಾ, ಲಕ್ಮೀ ಸಿಮಿಕೇರಿ, ಮಲ್ಲಮ್ಮ ಕಂಠಿ, ತುಳಸಿ ಹತ್ತರಕಿಹಾಳ, ಕನ್ಯಾಕುಮಾರಿ, ಪಲ್ಲವಿ, ಅಕ್ಕಮ್ಮ, ಅಂಬವ್ವ, ಗೀತಾ ಶಿಂಗೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.