ADVERTISEMENT

ಸಿಜೆಐ ಮೇಲೆ ಶೂ ಎಸೆಯಲು ಯತ್ನ: ಅ.16 ರಂದು ವಿಜಯಪುರ ಬಂದ್, ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 14:48 IST
Last Updated 15 ಅಕ್ಟೋಬರ್ 2025, 14:48 IST
   

ವಿಜಯಪುರ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆಯಲು ಯತ್ನಿಸಿದ ಘಟನೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಒಕ್ಕೂಟ, ರೈತ, ಮಹಿಳಾಪರ, ಕಾರ್ಮಿಕ, ವಿದ್ಯಾರ್ಥಿಪರ, ಬಸವಪರ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಅಕ್ಟೋಬರ್‌ 16 ರಂದು ವಿಜಯಪುರ ಬಂದ್ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿವೆ.

ಬಂದ್‌ ಹಿನ್ನೆಲೆಯಲ್ಲಿ ವಿಜಯ‍ಪುರ ನಗರ ವ್ಯಾಪ್ತಿಯಲ್ಲಿ ನಗರ ಸಾರಿಗೆ, ಆಟೋ ಸಂಚಾರ, ತರಕಾರಿ ಮಾರಾಟ, ಅಂಗಡಿ–ಮಳಿಗೆಗಳು, ಎಪಿಎಂಸಿ ಮಾರುಕಟ್ಟೆ ಬಹುತೇಕ ಬಾಗಿಲು ತೆರೆಯುವ ಸಾಧ್ಯತೆ ಇಲ್ಲ. ಬೆಳಿಗ್ಗೆ ಹೂವು, ಹಾಲು, ದಿನಪತ್ರಿಕೆ ಮಾರಾಟಕ್ಕೆ ಅವಕಾಶ ಇರಲಿದೆ. ಆಸ್ಪತ್ರೆ, ಔಷಧ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಬಂದ್‌ಗೆ ಕರೆ ನೀಡಿರುವ ಸಂಘಟಕರು ತಿಳಿಸಿದ್ದಾರೆ. 

ಮೆರವಣಿಗೆ

ADVERTISEMENT

ಪ್ರತಿಭಟನಾ ಮೆರವಣಿಗೆಯು ಬೆಳಿಗ್ಗೆ 10 ಗಂಟೆಗೆ ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಗಣಪತಿ ಚೌಕ, ವಾಜಪೇಯಿ ಸರ್ಕಲ್, ಕಿರಾಣ ಬಜಾರ್, ಸಿದ್ಧೇಶ್ವರ ರಸ್ತೆ, ಗಾಂಧಿ ವೃತ್ತದ ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದವರೆಗೆ ನಡೆಯಲಿದೆ.

ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು, ಈಗಾಗಲೇ ವೇದಿಕೆ ಸಿದ್ಧವಾಗಿದೆ. ವಿವಿಧ ಸಂಘಟನೆಗಳ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ಕೈಜೋಡಿಸಲು ವಿನಂತಿ

ವಿಜಯಪುರ ಬಂದ್ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ಎಲ್ಲ ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು, ಬುದ್ಧಿಜೀವಿಗಳು, ಸಮಾನತೆ, ಸೋದರತೆಯನ್ನು ಬಯಸುವ, ಸಂವಿಧಾನ ಸಂರಕ್ಷಣೆ ಬಯಸುವ ಪ್ರತಿಯೊಬ್ಬರು ಹಾಗೂ ಎಲ್ಲ ಸಮುದಾಯದವರು ಭಾಗವಹಿಸಬೇಕು ಮತ್ತು ನಗರದ ಎಲ್ಲ ವ್ಯಾಪಾರಸ್ಥರು  ಬೆಂಬಲಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಕಾಂಗ್ರೆಸ್‌ ಮುಖಂಡ ಅಬ್ದುಲ್‌ ಹಮೀದ್‌ ಮುಶ್ರಿಫ್‌, ಅಹಿಂದ ಮುಖಂಡರಾದ ಸೋಮನಾಥ ಕಳ್ಳಿಮನಿ, ಎಸ್‌.ಎಂ.ಪಾಟೀಲ ಗಣಿಹಾರ ಮತ್ತಿತರರು ವಿನಂತಿಸಿಕೊಂಡಿದ್ದಾರೆ. 

ಬಂದ್‌ಗೆ ಬೆಂಬಲ

ವಿಜಯಪುರ ಬಂದ್‌ಗೆ ಜಿಲ್ಲಾ ಶಿವಶರಣ ಸಮಗಾರ ಹರಳಯ್ಯ ಸಮಾಜದ ಮುಖಂಡ ವಸಂತ ಎಸ್. ಹೊನಮೊಡೆ, ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮದ್ಯ ಮಾರಾಟ ನಿಷೇಧ
ವಿಜಯಪುರ ಬಂದ್ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ನಗರದಲ್ಲಿ ಅ.16 ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ಎಲ್ಲಾ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಆದೇಶ ಹೊರಡಿಸಿದ್ದಾರೆ.

ಪಿಯುಸಿ ಪರೀಕ್ಷೆ ಮುಂದೂಡಿಕೆ

ವಿಜಯಪುರ: ಅ.16ರಂದು ದಲಿತ ಸಂಘಟನೆಗಳ ಒಕ್ಕೂಟ ಮತ್ತು ಅಹಿಂದ ಒಕ್ಕೂಟದವರು ವಿಜಯಪುರ ಬಂದ್ ಕರೆ ನೀಡಿರುವ ಪ್ರಯುಕ್ತ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಅ.16 ರಂದು ನಡೆಯಬೇಕಾಗಿದ್ದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅ.27ಕ್ಕೆ ಮುಂದೂಡಲಾಗಿದೆ. ಇನ್ನುಳಿದಂತೆ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಕೆ.ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.