ADVERTISEMENT

ಎಪಿಎಂಸಿ ನಿರ್ಮಾಣಕ್ಕೆ ಯೋಜನೆ: ಸಚಿವ ಪಾಟೀಲ

​ಪ್ರಜಾವಾಣಿ ವಾರ್ತೆ
Published 25 ಜೂನ್ 2023, 13:15 IST
Last Updated 25 ಜೂನ್ 2023, 13:15 IST
ಬಸವನಬಾಗೇವಾಡಿಯ ಎಪಿಎಂಸಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವ ಶಿವಾನಂದ ಪಾಟೀಲ ಚರ್ಚಿಸಿದರು
ಬಸವನಬಾಗೇವಾಡಿಯ ಎಪಿಎಂಸಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವ ಶಿವಾನಂದ ಪಾಟೀಲ ಚರ್ಚಿಸಿದರು    

ಬಸವನಬಾಗೇವಾಡಿ: ಪಟ್ಟಣದ ಹೊರವಲಯದಲ್ಲಿ ರೈತರ ಅನುಕೂಲಕ್ಕಾಗಿ ನೂರು ಎಕರೆ ಜಮೀನಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದರು.

ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ 13 ಎಕರೆ ವಿಸ್ತೀರ್ಣವಾದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಈಗಾಗಲೇ ಕುರಿ ಮತ್ತು ಈರುಳ್ಳಿ ಮಾರಾಟ ಸೇರಿದಂತೆ ಇತರೆ ವ್ಯಾಪಾರ-ವಹಿವಾಟು ನಡೆಯುತ್ತಿದೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಕುರಿ ಮಾರಾಟ ಈ ಮಾರುಕಟ್ಟೆಯಲ್ಲಿ ನಡೆಯುತ್ತಿದೆ. ಈ ಪ್ರಾಂಗಣ ವಿಸ್ತೀರ್ಣ ಕಡಿಮೆ ಇರುವುದರಿಂದ ಉಳಿದ ವ್ಯಾಪಾರ-ವಹಿವಾಟುವಿಗೆ ತೊಂದರೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪಟ್ಟಣದ ಹೊರವಲಯದಲ್ಲಿ ನೂರು ಎಕರೆ ಜಮೀನಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಮುಂಬರುವ ದಿನಗಳಲ್ಲಿ ಈ ಕಾರ್ಯ ಯೋಜನೆ ರೂಪಿಸಲಾಗುವುದು ಎಂದರು.

ADVERTISEMENT

ಪಟ್ಟಣದ ಎಪಿಎಂಸಿಯಲ್ಲಿ ಈರುಳ್ಳಿ ವ್ಯಾಪಾರಸ್ಥರು, ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚಿಸಿದ ಅವರು, ವಿಜಯಪುರದ ತೊರವಿ ರಸ್ತೆಯಲ್ಲಿರುವ ಎಪಿಎಂಸಿಯು 110 ಎಕರೆ ಜಮೀನು ಗುತ್ತಿಗೆ ಆಧಾರದ ಮೇಲೆ ಇದೆ. ಈ ಜಮೀನಿನ ಗುತ್ತಿಗೆ ಅವಧಿ ಮುಕ್ತಾಯವಾಗಲು ಬಂದಿದೆ. ಇನ್ನೂ 100 ವರ್ಷ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಎಪಿಎಂಸಿ ಕಾರ್ಯದರ್ಶಿ ಶೈಲಜಾ ಎಂ.ವಿ., ಸಹಾಯಕ ನಿರ್ದೇಶಕ ಶಿವಾನಂದ ಗೋಠೆ, ಸಹ ಕಾರ್ಯನಿರ್ವಾಹಕ ಎಂಜಿನಿಯರ್‌ ಎಸ್.ಐ. ಕದರಿ, ಸಹಕಾರ್ಯದರ್ಶಿ ಐ.ಎಸ್. ಔರಂಗಬಾದ, ಸಿಬ್ಬಂದಿ ಎಸ್.ಡಿ. ಮನಗೂಳಿ, ಆರ್.ಬಿ. ದುಲಾರಿ, ಜ್ಯೋತಿ ಬಿರಾದಾರ, ಮುಖಂಡ ಶೇಖರ ಗೊಳಸಂಗಿ, ಸುರೇಶ ಹಾರಿವಾಳ, ಚಂದ್ರಶೇಖರಗೌಡ ಪಾಟೀಲ, ಬಸವರಾಜ ಸೋಮಪುರ, ಶಂಕರಗೌಡ ಬಿರಾದಾರ, ಬಸವರಾಜ ರಾಯಗೊಂಡ, ಸಂಗಮೇಶ ಓಲೇಕಾರ, ಜಗದೇವಿ ಗುಂಡಳ್ಳಿ, ನಜೀರ ಗಣಿ, ಮುದುಕು ಬಸರಕೋಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.