ADVERTISEMENT

ಲೋಪವಾಗದಂತೆ ಮುಂಜಾಗ್ರತೆ ವಹಿಸಿ: ಎಂ.ಬಿ.ಪಾಟೀಲ

ಜ.9 ರಂದು ಜಿಲ್ಲೆಯ ಅಭಿವೃದ್ದಿ ಕಾರ್ಯಗಳಿಗೆ ಸಿಎಂ,ಡಿಸಿಎಂ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 3:58 IST
Last Updated 7 ಜನವರಿ 2026, 3:58 IST
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಿಎಂ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾತನಾಡಿದರು 
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಿಎಂ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾತನಾಡಿದರು    

ವಿಜಯಪುರ: ಜನವರಿ 9ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಸಬೇಕು, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚಿಸಿದರು. 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಿಎಂ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ಅಂದು ನಗರದಲ್ಲಿ ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ, ಸೈಕ್ಲಿಂಗ್‌ ವೆಲೋಡ್ರೊಮ್‌ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ, ಉದ್ಘಾಟನೆ, ಶಿಲಾನ್ಯಾಸ, ಜಿಲ್ಲಾ ಪ್ರಜಾಸೌಧ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ADVERTISEMENT

ನಗರದ ದರಬಾರ್‌ ಶಾಲಾ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಕಾರ್ಯಕ್ರಮವನ್ನು ಆಯೋಜಿಸಿ, ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿ, ಯಾವುದೇ ಲೋಪವಾಗದಂತೆ ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಹಾಗೂ  ಶಂಕುಸ್ಥಾಪನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆಯಿಂದಿ ಪ್ರಸಕ್ತ ವರ್ಷದ ವಿಜಯಪುರ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಛಾಯಾಚಿತ್ರದ(ಕ್ಯಾಲೆಂಡರ್) ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್‌ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ, ಶಾಸಕರಾದ ವಿಠ್ಠಲ ಕಟಕಧೋಂಡ, ಅಶೋಕ ಮನಗೂಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ್‌ ಉಪಸ್ಥಿತರಿದ್ದರು.

Quote - ರಾಣಿ ಚೆನ್ನಮ್ಮ ದೇಶದ ಆಸ್ತಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕನ್ನಡ ನಾಡಿನ ಶ್ರೇಷ್ಠ ಮಹಿಳೆ. ಜಿಲ್ಲೆಯ ಎಲ್ಲರೂ ಕೂಡಿಯೇ ಮೂರ್ತಿ ಉದ್ಘಾಟನೆ ಮಾಡುತ್ತಿದ್ದೇವೆ –ಎಂ.ಬಿ.ಪಾಟೀಲ ಸಚಿವ

‘ಸಿದ್ದರಾಮಯ್ಯ ಆಡಳಿತಕ್ಕೆ 11 ಅಂಕ’

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ನಮಗೆಲ್ಲ ಹೆಮ್ಮೆ ಇದೆ.ದೇವರಾಜ ಅರಸು ಅವಂತೆ  ಸಿದ್ದರಾಮಯ್ಯ ಶ್ರೇಷ್ಠ ನಾಯಕರು. ಸಿದ್ದರಾಮಯ್ಯ ಆಡಳಿತಕ್ಕೆ 10ರ ಪೈಕಿ 11 ಅಂಕ ಕೊಡುತ್ತೇನೆ ಎಂದ ಸಚಿವ      ಎಂ.ಬಿ.ಪಾಟೀಲ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವರಾಜ ಅರಸು ಹಾಗೂ ಸಿದ್ದರಾಮಯ್ಯ ಅವರದ್ದು ವಿಭಿನ್ನ ವ್ಯಕ್ತಿತ್ವ. ಸಾಮಾನ್ಯ ಕೃಷಿ ಕುಟುಂಬದಲ್ಲಿ ಜನಿಸಿ ಹಿಂದುಳಿದ ಅಲ್ಪಸಂಖ್ಯಾತ ದಲಿತ ಕೃಷಿಕರ ಬಗ್ಗೆ ಅಪಾರ ಕಾಳಜಿ ಬದ್ಧತೆ ಹೊಂದಿದವ ಸಮಾಜವಾದಿ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯ ಸೈದ್ಧಾಂತಿಕ ಹೋರಾಟ ಮಾಡುತ್ತಾ ಬಂದವರು ಎಂದರು. ಕಾಂಗ್ರೆಸ್ ಪಕ್ಷ ಸೋನಿಯಾಗಾಂಧಿ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನ ಗುರುತಿಸಿ ಎರಡೂ ಬಾರಿ ಸಿಎಂ ಆಗಿ ಮಾಡಿದ್ದಾರೆ. ಅನ್ನಭಾಗ್ಯ ಕ್ಷೀರ ಭಾಗ್ಯ ಕೃಷಿ ಭಾಗ್ಯ ಪಂಚ ಗ್ಯಾರಂಟಿ ಮೂಲಕ ದಾಖಲೆ ನಿರ್ಮಿಸಿದ್ದಾರೆ ಎಂದು ಹೇಳಿದರು. ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ಉದ್ಘಾಟನೆಗೆ ಯಾವುದೇ ವಿರೋಧ ಗೊಂದಲ ಇಲ್ಲ. ಪಂಚಮಸಾಲಿ ಸಮುದಾಯ ವಿರೋಧ ಅನ್ನೋದು ಮುಗಿದು ಹೋದ ಅಧ್ಯಾಯ. ಮೀಸಲಾತಿ ಹೋರಾಟಕ್ಕೂ ಮೂರ್ತಿ ಉದ್ಘಾಟನೆಗೂ ಸಂಬಂಧವಿಲ್ಲ ಎಂದು ತಿಳಿಸಿದರು.

ಹೋರಾಟದ ಉದ್ದೇಶ ಅರ್ಥವಾಗುತ್ತಿಲ್ಲ’

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಷಯದಲ್ಲಿ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಸಿಎಂ ಅವರನ್ನ ಭೇಟಿ ಮಾಡಿಸಿದ್ದೇನೆ. ಸರ್ಕಾರಿ ಕಾಲೇಜು ಮಾಡಲು ಮುಖ್ಯಮಂತ್ರಿ ಒಪ್ಪಿದ್ದಾರೆ. ಡಿ.9ರಂದು ಮತ್ತೊಮ್ಮೆ ಸಿಎಂ ಭೇಟಿ ಮಾಡಿಸುತ್ತೇನೆ. ಇಷ್ಟೆಲ್ಲ ಹೇಳಿದ ಮೇಲೂ ಹೋರಾಟಗಾರರ ಉದ್ದೇಶ ನನಗೆ ಅರ್ಥವಾಗುತ್ತಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು. ಸಿಎಂ ಬರೆದು ಕೊಡಬೇಕು ಸಚಿವ ಸಂಪುಟದಲ್ಲಿ ಘೋಷಣೆ ಮಾಡಬೇಕು ಎಂದರೆ ಆಗುವುದಿಲ್ಲ. ರಾಜ್ಯದಲ್ಲಿ ದಿನಕ್ಕೆ ಸಾವಿರಾರು ಪ್ರತಿಭಟನೆ ಆಗುತ್ತವೆ. ಎಲ್ಲರಿಗೂ ಲಿಖಿತವಾಗಿ ಬರೆದುಕೊಡಲು ಆಗುತ್ತದೆಯೇ ಎಂದು ಪ್ರಶ್ನಿಸಿದರು. ಹೋರಾಟಗಾರರ ಬಗ್ಗೆ ನನಗೆ ಗೌರವ ಇದೆ. ಪಿಪಿಪಿ ಮಾಡಲ್ಲ ಹಣದ ಲಭ್ಯತೆ ನೋಡಿಕೊಂಡು ಸರ್ಕಾರಿ ಮೆಡಿಕಲ್ ಕಾಲೇಜು ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳಿಂದಲೇ ಹೇಳಿಸುತ್ತೇನೆ. ನಮ್ಮ ಮೇಲೆ ನಂಬಿಕೆ ಇರಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.