ADVERTISEMENT

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

ಜಾಲವಾದದಲ್ಲಿ ಬಿಜೆಪಿ ಒಬಿಸಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 16:11 IST
Last Updated 6 ಮಾರ್ಚ್ 2023, 16:11 IST
ಜಾಲವಾದ ಗ್ರಾಮದಲ್ಲಿ ಜರುಗಿದ ಬಿಜೆಪಿ ಒಬಿಸಿ ಸಮಾವೇಶವನ್ನು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು
ಜಾಲವಾದ ಗ್ರಾಮದಲ್ಲಿ ಜರುಗಿದ ಬಿಜೆಪಿ ಒಬಿಸಿ ಸಮಾವೇಶವನ್ನು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು   

ದೇವರಹಿಪ್ಪರಗಿ: ಬಿಜೆಪಿ ಎಂದಿಗೂ ಅಲ್ಪಸಂಖ್ಯಾತರ ವಿರೋಧಿಯಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ತಾಲ್ಲೂಕಿನ ಜಾಲವಾದ ಗ್ರಾಮದಲ್ಲಿ ಸೋಮವಾರ ಜರುಗಿದ ಓಬಿಸಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

ಜನಪರ ಆಡಳಿತದ ಮೂಲಕ ಜನಪರ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ. 2014 ರಿಂದ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡುವ ಮೂಲಕ ಪ್ರಧಾನಿ ಮೋದಿ ಅವರು ಭಾರತದ ಹೆಸರನ್ನು ಜಗತ್ತಿನ ಮೂಲೆಮೂಲೆಗೆ ಪಸರಿಸಿದ್ದಾರೆ ಎಂದರು.

ADVERTISEMENT

ಬಿ.ಎಸ್.ಯಡಿಯೂರಪ್ಪ ಕಳೆದ ಮೂರು ದಶಕಗಳಿಂದ ಸತತ ಹೋರಾಟ ಮೂಲಕ ಆಡಳಿತಕ್ಕೆ ಬಂದು ರೈತಪರ ಬಜೆಟ್ ಮಂಡಿಸಿ ನೂರಾರು ರೈತರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದಾರೆ. ಈಗ ಬಸವರಾಜ ಬೊಮ್ಮಾಯಿ ಅವರು ಹಿಂದುಳಿದ ವರ್ಗಗಳಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ ನೂರಾರು ಕೋಟಿ ಅನುದಾನ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಿಸಾನ್ ಸಮ್ಮಾನ ಯೋಜನೆಯಡಿ ರಾಜ್ಯದ 54 ಲಕ್ಷ ರೈತರಿಗೆ ನೆರವು ಒದಗಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರಬೇಕು ಅದಕ್ಕಾಗಿ ಸ್ಥಳೀಯ ಶಾಸಕರ ಕೈ ಬಲಪಡಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕಾಂಗ್ರೆಸ್ ಪಕ್ಷ ಭಾರತ ಜೋಡೊ ಯಾತ್ರೆ ಕೈಗೊಂಡಿತ್ತು. ಹಾಗಾದರೆ ಭಾರತವನ್ನು ತುಂಡರಿಸಿದವರು ಯಾರು? ಕಾಶ್ಮೀರಕ್ಕೆ ಸ್ವತಂತ್ರ ಸ್ಥಾನಮಾನ, ಸಂವಿಧಾನ ನೀಡಿದವರು ಯಾರು ಎಂದು ಪ್ರಶ್ನಿಸಿದರು.

ದೇಶದ ಹಿಂದುಳಿದ ವರ್ಗಗಳಿಗೆ ಬಿಜೆಪಿಯೊಂದೇ ಆಶಾಕಿರಣ. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನ ಪೊಳ್ಳು ಭರವಸೆಗಳನ್ನು ನಂಬಬೇಡಿ ಎಂದರು.

ರಾಜ್ಯದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ನೆ.ಲ.ನರೇಂದ್ರಬಾಬು ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಯಾವುದೇ ಹಂಗಿಲ್ಲದೇ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ , ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಸಿಂದಗಿ ಶಾಸಕ ರಮೇಶ ಭೂಸನೂರ, ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ, ಎಸ್.ಕೆ.ಬೆಳ್ಳುಬ್ಬಿ, ಅಶೋಕ ಅಲ್ಲಾಪೂರ, ಅಪ್ಪುಗೌಡ ಪಾಟೀಲ ಮನಗೂಳಿ, ಭೀಮನಗೌಡ ಸಿದರಡ್ಡಿ, ಪ್ರಭುಗೌಡ ಪಾಟೀಲ(ಅಸ್ಕಿ) ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಸಾಬು ಮಾಶ್ಯಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.