ADVERTISEMENT

ಸಿ.ಎಂ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 12:56 IST
Last Updated 9 ಜುಲೈ 2019, 12:56 IST
ವಿಜಯಪುರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ಮಾಡಿದರು
ವಿಜಯಪುರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ಮಾಡಿದರು   

ವಿಜಯಪುರ: ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ಮಾಡಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಮಾತನಾಡಿ, ‘ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಬಿಜೆಪಿ ಸಂಖ್ಯಾಬಲ 107ಕ್ಕೆ ಏರಿಕೆಯಾಗಿದೆ. 13 ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರದ ಸಂಖ್ಯಾಬಲ 104ಕ್ಕೆ ಕುಸಿದಿದೆ. ಆದ್ದರಿಂದ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

ಮುಖಂಡ ವಿಜುಗೌಡ ಪಾಟೀಲ ಮಾತನಾಡಿ, ‘ಆಂತರಿಕ ಕಚ್ಚಾಟದಿಂದ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಕುಮಾರಸ್ವಾಮಿ ಅವರು ಜನರ ಬೆಂಬಲ ಹಾಗೂ ಶಾಸಕರ ಬೆಂಬಲ ಎರಡನ್ನೂ ಕಳೆದುಕೊಂಡು, ಅಧಿಕಾರದ ದುರಾಸೆಯಿಂದ ಅತಂತ್ರ ಸ್ಥಿತಿಯಲ್ಲೂ ಅಧಿಕಾರಕ್ಕೆ ಜೋತು ಬಿದ್ದಿದ್ದಾರೆ. ಆದ್ದರಿಂದ ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಸುರೇಶ ಬಿರಾದಾರ ಮಾತನಾಡಿ, ‘ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಆಡಳಿತ ಪಕ್ಷದ ಶಾಸಕರೇ ರಾಜೀನಾಮೆ ನೀಡಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬಾರದು’ ಎಂದು ಆಗ್ರಹಿಸಿದರು.

ಕಾಸುಗೌಡ ಬಿರಾದಾರ ಮಾತನಾಡಿದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಎಸ್.ಪಾಟೀಲ, ಸಂಗರಾಜ ದೇಸಾಯಿ, ದಯಾಸಾಗರ ಪಾಟೀಲ, ಶಿವರುದ್ರ ಬಾಗಲಕೋಟ, ಶೀಲವಂತ ಉಮರಾಣಿ, ಭೀಮಾಶಂಕರ ಹದನೂರ, ಮಳುಗೌಡ ಪಾಟೀಲ, ಪಾಲಿಕೆ ಸದಸ್ಯರಾದ ಉಮೇಶ ವಂದಾಲ, ರಾಹುಲ ಜಾಧವ, ಅಲ್ತಾಫ್ ಇಟಗಿ, ಬಸವರಾಜ ಬೈಚಬಾಳ, ಬಾಬು ಶಿರಶ್ಯಾಡ, ವಿದ್ಯಾ ಪಾಟೀಲ, ವಿಜಯ ಜೋಶಿ, ರಾಕೇಶ ಕುಲಕರ್ಣಿ, ರಾಜೇಶ ತಾವಸೆ, ವಿನಾಯಕ ದಹಿಂಡೆ, ವಿಠ್ಠಲ ನಡುವಿನಕೇರಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.