ವಿಜಯಪುರ: ಸಂವಿಧಾನದ 370ನೇ ವಿಧಿ ಮತ್ತು ‘35–ಎ’ ಕಲಂ ಅನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಸೋಮವಾರ ವಿಜಯೋತ್ಸವ ಆಚರಿಸಲಾಯಿತು.
ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿ, ‘ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ಸಮಸ್ಯೆಯ ಕುರಿತು ಕೈಗೊಂಡ ಮಹತ್ವ ನಿರ್ಣಯ ದೇಶದ ಜನತೆಗೆ ಅನುಕೂಲವಾಗಲಿದೆ’ ಎಂದರು.
ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಜಗದೀಶ ಹಿರೇಮನಿ ಮಾತನಾಡಿ, ‘ಭಾರತ ದೇಶದಲ್ಲಿ ಎರಡು ಪ್ರಧಾನಿ, ಎರಡು ಸಂವಿಧಾನ ಮಾಡಲು ಬಿಡುವುದಿಲ್ಲ ಎಂಬುವುದನ್ನು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ’ ಎಂದು ಹೇಳಿದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಮುಖಂಡರಾದ ವಿಜಯಕುಮಾರ ಪಾಟೀಲ, ಸಿದ್ಲಿಂಗ ಹಂಜಗಿ, ರಾಜು ಗಚ್ಚಿನಮಠ, ರಾಜ್ಯ ಯುವ ಮೋಚಾ ಖಜಾಂಚಿ ಉಮೇಶ ಕಾರಜೋಳ, ಪ್ರಕಾಶ ಅಕ್ಕಲಕೋಟ, ಬೆಳಗಾವಿ ವಿಭಾಗದ ಪ್ರಧಾನ ಕಾರ್ಯದರ್ಶಿ ದಯಾಸಾಗರ ಪಾಟೀಲ, ಎಸ್.ಸಿ.ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಚಿದಾನಂದ ಚಲವಾದಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಮ್ಮ ಜೋಗೂರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.