ADVERTISEMENT

ತಪ್ಪಿತಸ್ಥರ ವಿರುದ್ಧ ಕ್ರಮ: ಸಚಿವ

ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2019, 11:09 IST
Last Updated 22 ಅಕ್ಟೋಬರ್ 2019, 11:09 IST

ವಿಜಯಪುರ: ‘ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿಗೂಢ ವಸ್ತು ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದ್ದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶವನ್ನು ಅಭದ್ರಗೊಳಿಸಲು ಈ ರೀತಿಯ ಸಂಚು ನಡೆದಿದೆ. ತನಿಖಾ ವರದಿ ಕೈಸೇರಿದ ಬಳಿಕ ಶಿಸ್ತು ಕ್ರಮಕೈಗೊಳ್ಳಲಾಗುವುದು’ ಎಂದರು.

‘ರೈಲ್ವೆ ಖಾಸಗೀಕರಣ ಮಾಡುತ್ತಿಲ್ಲ. ಈ ಬಗ್ಗೆ ಅಪಪ್ರಚಾರಕ್ಕೆ ಕಿವಿಗೊಡಬಾರದು. ಪ್ರಯಾಣಿಕರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ. ದೇಶದ ರೈಲ್ವೆ ಮಾರ್ಗಗಳ ವಿದ್ಯುತ್ತೀಕರಣಕ್ಕೆ ₹13 ಸಾವಿರ ಕೋಟಿ ಅನುದಾನ ಮೀಸಲಿರಿಸಲಾಗಿದೆ. ರಾಜ್ಯಕ್ಕೆ ಮಂಜೂರಾದ ಯೋಜನೆಗಳು ಪೂರ್ಣಗೊಂಡ ಬಳಿಕ, ಹೊಸ ಯೋಜನೆಗಳನ್ನು ಘೋಷಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

‘ವಿಜಯಪುರ–ಯಶವಂತಪುರ ಹೊಸ ರೈಲು ಸೇವೆಗೆ ಚಾಲನೆ ನೀಡಲಾಗಿದೆ. ಈ ರೈಲು ವಿಜಯಪುರದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಬೆಳಿಗ್ಗೆ 4.15 ಗಂಟೆಗೆ ಬೆಂಗಳೂರು ತಲುಪಲಿದೆ. ಸಂಚಾರದ ವೇಳಾಪಟ್ಟಿಯನ್ನು ಬದಲಿಸಬೇಕು ಎಂದು ಜನಪ್ರತಿನಿಧಿಗಳು, ಸಾರ್ವಜನಿಕರು ಕೇಳಿಕೊಂಡಿದ್ದಾರೆ. ಹೀಗಾಗಿ, ಮುಂಬರುವ ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ರೀತಿಯಲ್ಲಿ ರಾತ್ರಿ 8 ಅಥವಾ 8.30 ಗಂಟೆಗೆ ಇಲ್ಲಿಂದ ಹೊರಡುವ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.