ADVERTISEMENT

ಬಿ.ಎಸ್.ಯಡಿಯೂರಪ್ಪ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 7:05 IST
Last Updated 30 ನವೆಂಬರ್ 2020, 7:05 IST
ಗೋವಿಂದ ಕಾರಜೋಳ (ಪ್ರಜಾವಾಣಿ ಸಂಗ್ರಹ ಚಿತ್ರ)
ಗೋವಿಂದ ಕಾರಜೋಳ (ಪ್ರಜಾವಾಣಿ ಸಂಗ್ರಹ ಚಿತ್ರ)   

ವಿಜಯಪುರ: ಮುಖ್ಯಮಂತ್ರಿ ಬದಲಾವಣೆ ಎಂಬುದು ಗಾಳಿ ಸುದ್ದಿ, ಮಾಧ್ಯಮಗಳ ಸೃಷ್ಟಿ. ಬಿ.ಎಸ್.ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ನಿರ್ದೇಶನಕಕ್ಕಾಗಿ ಕಾಯುತ್ತಿದ್ದೇವೆ. ಶೀಘ್ರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.

ಬೇರೆ ಪಕ್ಷಗಳನ್ನು ತೊರೆದು ಬಿಜೆಪಿಗೆ ಬಂದಿರುವ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು. ಖಂಡಿತಾ ಸಿಗಲಿದೆ ಎಂದು ಹೇಳಿದರು.

ADVERTISEMENT

ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆಗೂಳಿಸುವ ಮುನ್ನ ಕಾನೂನು ಮತ್ತು ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ಚರ್ಚಿಸಿ, ಅಡ್ವಕೇಟ್ ಜನರಲ್ ಅಭಿಪ್ರಾಯ ಪಡೆದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

'ನಾಗಠಾಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಕಾರಜೋಳ ತಡೆಯೊಡ್ಡಿದ್ದಾರೆ. ಅನುದಾನ ತಡೆಹಿಡಿದಿದ್ದಾರೆ. ನನಗೆ ಜೀವ ಬೆದರಿಕೆ ಇದೆ' ಎಂಬ ಶಾಸಕ ದೇವಾನಂದ ಚವ್ಹಾಣ ಅವರ ಆರೋಪವನ್ನು ಸುಳ್ಳು ಎಂದ ಕಾರಜೋಳ, ನಮ್ಮ ಸರ್ಕಾರದಲ್ಲಿ ಪ್ರತಿಯೊಬ್ಬ ಶಾಸಕರಿಗೂ ರಕ್ಷಣೆ ಇದೆ. ನಾಗಠಾಣ ಶಾಸಕರು ಭ್ರಮೆಯಲ್ಲಿದ್ದಾರೆ. ಜನರಿಂದ ಅವರು ದೂರವಾಗಿದ್ದಾರೆ. ಜನ ಅವರನ್ನು ಒಪ್ಪುತ್ತಿಲ್ಲ. ಹೀಗಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಪಿ.ರಾಜು, ಸಂಸದ ರಮೇಶ್ ಜಿಗಜಿಣಗಿ, ಮುಖಂಡರಾದ ವಿಜುಗೌಡ ಪಾಟೀಲ, ಆರ್.ಎಸ್.ಪಾಟೀಲ ಕೂಚಬಾಳ, ಎಸ್.ಕೆ.ಬೆಳ್ಳುಬ್ಬಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.