ADVERTISEMENT

ಮಹಾರಾಷ್ಟ್ರ ಮುಖಂಡರ ಪ್ರತಿಕೃತಿ ದಹಿಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 15:51 IST
Last Updated 8 ಡಿಸೆಂಬರ್ 2022, 15:51 IST
ಕರ್ನಾಟಕ ರಕ್ಷಣಾ ವೇದಿಕೆ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದಗೆ ಮನವಿ ಸಲ್ಲಿಸಿದರು 
ಕರ್ನಾಟಕ ರಕ್ಷಣಾ ವೇದಿಕೆ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದಗೆ ಮನವಿ ಸಲ್ಲಿಸಿದರು    

ವಿಜಯಪುರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸುತ್ತಿರುವ ಗೂಂಡಾಗಳ ಮೇಲೆ ಕ್ರಮಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಪದಾಧಿಕಾರಿಗಳು ಪ್ರತಿಭಟಿಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಶಿವಸೇನಾ ಮತ್ತು ಎಂ.ಎನ್.ಎಸ್. ಮುಖಂಡರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ.ಮುಲ್ಲಾ ಮಾತನಾಡಿ, ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಕರ್ನಾಟಕ ಅನೇಕ ಕನ್ನಡದ ಪ್ರದೇಶಗಳನ್ನು ಕಳೆದುಕೊಂಡರೂ ರಾಷ್ಟ್ರೀಯ ಏಕತೆಗೆ ಭಂಗ ಬಾರದೆಂದು ಆದ ಅನ್ಯಾಯವನ್ನು ಸಹಿಸಿಕೊಂಡು ಬಂದಿದೆ. ಆದರೆ, ಅಪ್ಪಟ ಕನ್ನಡದ ನೆಲವಾದ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ದಶಕಗಳಿಂದ ತಗಾದೆ ತೆಗೆಯುತ್ತ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ ಎಂದು ಆರೋಪಿಸಿದರು.

ADVERTISEMENT

ಮಹಾರಾಷ್ಟ್ರದ ಒತ್ತಡದಿಂದಲೇ ಕೇಂದ್ರ ಸರ್ಕಾರದಿಂದ ರಚಿಸಲ್ಪಟ್ಟ ಮಹಾಜನ್ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂದು ತೀರ್ಪು ನೀಡಿದೆ. ಆದರೆ, ಇದನ್ನು ಒಪ್ಪದ ಮಹಾರಾಷ್ಟ್ರ ಮತ್ತು ಅಲ್ಲಿನ ರಾಜಕಾರಣಿಗಳು ದಶಕಗಳಿಂದ ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಸಂಘರ್ಷದ ವಾತಾವರಣವನ್ನು ನಿರ್ಮಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.

ಬೆಳಗಾವಿ ವಿವಾದ ಈಗ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ. ಇಂಥ ಸಂದರ್ಭದಲ್ಲಿ ಈ ನೆಲದ ಕಾನೂನಿಗೆ ಗೌರವ ನೀಡಿ, ತೀರ್ಪಿಗಾಗಿ ಕಾಯುವ ಬದಲು ಬೆಳಗಾವಿಯಲ್ಲಿ ಸಂಘರ್ಷ ಮೂಡಿಸಲು ಯತ್ನಿಸಲಾಗುತ್ತಿದೆ ಎಂದರು.

ಕರವೇ ಮುಖಂಡರಾದ ಅಶೋಕ ಹಾರಿವಾಳ, ಜೈ ಭೀಮ ಮುತ್ತಗಿ, ಫಯಾಜ ಕಲಾದಗಿ, ದಸ್ತಗೀರ ಸಾಲೋಟಗಿ, ಮಹಾದೇವ ರಾವಜಿ, ದಯಾನಂದ ಸಾವಳಗಿ, ನಿಸಾರ ಬೇಪಾರಿ, ಪ್ರಭು ಪಾಟೀಲ, ಶಂಕರ ತೆಗ್ಗಿ, ನಬಿ ರಸೂಲ್ ಬಾನಕರ, ವಿಜಯಕುಮಾರ ಯಂಭತ್ನಾಳ, ಭೀಮು ಹೂಗಾರ, ನಿರಂಜನ ಪೂಜಾರಿ, ರವಿ ಹೂಗಾರ, ಆನಂದ ಕ್ಷತ್ರಿ ಮುಂತಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.