ವಿಜಯಪುರ: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ಗಳಿಗೆ ಪ್ರವೇಶ ಸಂಬಂಧ ಜಿಲ್ಲೆಯ 33 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸುಸೂತ್ರವಾಗಿ ನಡೆಯಿತು.
ಭೌತಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿಕೊಂಡ 13,275 ಪರೀಕ್ಷಾರ್ಥಿಗಳ ಪೈಕಿ 12,747 ಪರೀಕ್ಷಾರ್ಥಿಗಳು ಹಾಜರಾಗಿ, 528 ಪರೀಕ್ಷಾರ್ಥಿಗಳು ಗೈರಾಗಿದ್ದರು. ಮಧ್ಯಾಹ್ನ ನಡೆದ ರಸಾಯನ ಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿಕೊಂಡ 13,636 ಪರೀಕ್ಷಾರ್ಥಿಗಳ ಪೈಕಿ 13,095 ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 541 ಪರೀಕ್ಷಾರ್ಥಿಗಳು ಪರೀಕ್ಷೆಗೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೊಸಮನಿ ತಿಳಿಸಿದ್ದಾರೆ.
ಸಿಇಟಿ ಕೇಂದ್ರಗಳಿಗೆ ಭೇಟಿ: ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರದ ವಿಬಿ ದರ್ಬಾರ್ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ಕಾರ್ಯವಿಧಾನ ಪರಿಶೀಲಿಸಿದರು.
ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿ ಅನ್ವಯ ಕಾರ್ಯನಿರ್ವಹಣೆ ಹಾಗೂ ಅವರಿಂದ ಪರೀಕ್ಷಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು.
‘ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಬಾರದಂತೆ ಎಚ್ಚರ ವಹಿಸಬೇಕು. ಯಾವುದೇ ಪರೀಕ್ಷಾ ಕೇಂದ್ರದಿಂದ ದೂರಿಗೆ ಆಸ್ಪದ ನೀಡದೇ ಜವಾಬ್ದಾರಿಯನ್ನು ಸುಸೂತ್ರವಾಗಿ ಹಾಗೂ ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಹೇಳಿದರು.
ಪರೀಕ್ಷಾ ಕೇಂದ್ರದಲ್ಲಿನ ವೆಬ್ ಕಾಸ್ಟಿಂಗ್ ಕಾರ್ಯನಿರ್ವಹಣೆ ವ್ಯವಸ್ಥೆ ವೀಕ್ಷಿಸಿದರು. ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಇದ್ದರು.
ಸಿಇಓ ರಿಷಿ ಆನಂದ್ ಪರಿಶೀಲನೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಅವರು ನಗರದ ಪಿಡಿಜೆ ಪದವಿ ಪೂರ್ವ ಕಾಲೇಜು ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಸಿಇಟಿ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ, ಪರೀಕ್ಷೆ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಮೂಲಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಬಸವರಾಜ ಗಂಗನಳ್ಳಿ, ಪರೀಕ್ಷಾ ವೀಕ್ಷಕ ಎಸ್. ಎಸ್. ಅಂಗಡಿ, ಪ್ರಶ್ನೆ ಪತ್ರಿಕೆ ಪಾಲಕರಾದ ದಂದರಗಿ, ಕೊಠಡಿ ಮೇಲ್ವಿಚಾರಕರು, ಗಣಕಯಂತ್ರ ನಿರ್ವಾಹಕರು ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.