ಚಡಚಣ: 22ರಂದು ಆರಂಭಗೊಳ್ಳಲಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಿಂದ ಪ್ರೌಢಶಾಲಾ ಶಿಕ್ಷಕರನ್ನು ಕೈಬಿಡುವಂತೆ ಆಗ್ರಹಿಸಿ ಶನಿವಾರ ಪ್ರೌಢಶಾಲೆಯ ನೂರಾರು ಶಿಕ್ಷಕರು ತರಬೇತಿ ಬಹಿಷ್ಕರಿಸಿ ಸ್ಥಳಿಯ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಆರ್.ಎಂ.ಚೋಪಡೆ, ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಬಳಸಿಕೊಂಡಿಲ್ಲ. ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಕಾರ್ಯಭಾರ, ಶಿಕ್ಷಣ ಇಲಾಖೆ ನೀಡಿದ 29 ಅಂಶಗಳ ಅನುಷ್ಠಾನ ಸೇರಿದಂತೆ ಹಲವು ಕಾರ್ಯಗಳು ಪ್ರೌಢಶಾಲಾ ಶಿಕ್ಷಕರ ಮೇಲಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಪ್ರೌಢಶಾಲಾ ಶಿಕ್ಷಕರನ್ನು ಗಣತಿ ಕಾರ್ಯದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎ.ಎಸ್.ಕರ್ಜಗಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಸ್.ದಂದರಗಿ ಮಾತನಾಡಿ, ಗಣತಿ ಕಾರ್ಯಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮೊದಲು ಆದ್ಯತೆ ನೀಡಲು ಆದೇಶವಿದೆ. ಚಡಚಣ ವಲಯದಲ್ಲಿ ಅಗತ್ಯ ಪ್ರಾಥಮಿಕ ಶಾಲಾ ಶಿಕ್ಷಕರಿದ್ದರೂ ಪ್ರೌಢಶಾಲಾ ಶಿಕ್ಷಕರರನ್ನು ನಿಯೋಜನೆ ಮಾಡುವುದನ್ನು ವಿರೋಧಿಸುತ್ತೇವೆ. ಕೂಡಲೇ ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಪೌಢಶಾಲಾ ಶಿಕ್ಷಕರನ್ನು ಗಣತಿ ಕಾರ್ಯದಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.
ನಂತರ ತಹಶಿಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ,ಕಚೇರಿ ಎದಿರು ಧರಣಿ ಸತ್ಯಾಗ್ರಹ ನಡೆಸಿದರು.
ಪ್ರತಿಭಟನೆಯಲ್ಲಿ ಪ್ರೌಢ ಶಾಲಾ ಸೋಸಾಯಿಟಿ ಅಧ್ಯಕ್ಷ ಆರ್.ಎಂ.ಬಂಡಿ,ಉಪಾಧ್ಯಕ್ಷ ಎಸ್.ಐ ಚನಗೊಂಡ,ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಸುನಿಲ ಶಹಾ ಸೇರಿದಂತೆ ನೂರಾರು ಶಿಕ್ಷಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.