ADVERTISEMENT

ನೀರು ಕೊಡಿ ನೀರು; ಪ್ರತಿಧ್ವನಿ

ಜಲಮಂಡಳಿ ಅಧಿಕಾರಿಗಳಿಗೆ ಪಾಲಿಕೆ ಸದಸ್ಯರ ತರಾಟೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2019, 17:10 IST
Last Updated 13 ಜೂನ್ 2019, 17:10 IST
ವಿಜಯಪುರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಬಿ.ಪಾಟೀಲ ಮಾತನಾಡಿದರು
ವಿಜಯಪುರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಬಿ.ಪಾಟೀಲ ಮಾತನಾಡಿದರು   

ವಿಜಯಪುರ: ‘24X7 ನೀರು ಸರಬರಾಜು ಯೋಜನೆ ಎಷ್ಟು ವಾರ್ಡ್‌ಗಳಲ್ಲಿ ಪೂರ್ಣಗೊಂಡಿದೆ. ಕೆಲಸ ಸ್ಥಗಿತಗೊಂಡಿದ್ದು ಏಕೆ. ಗುತ್ತಿಗೆದಾರರಿಗೆ ಎಷ್ಟು ಹಣ ಪಾವತಿಸಲಾಗಿದೆ. ನಗರಕ್ಕೆ ಪೂರ್ಣ ಪ್ರಮಾಣದಲ್ಲಿ ಯಾವಾಗ ನೀರು ಕೊಡುತ್ತೀರಿ. ಈಗ 20–22 ದಿನಕ್ಕೊಮ್ಮೆ ನೀರು ಬರುತ್ತಿದೆ, ಹೀಗಾದರೆ ಜನರು ಬದುಕುವುದಾದರೂ ಹೇಗೆ?..

–ಇವು ಜಲಮಂಡಳಿ ಅಧಿಕಾರಿಗಳನ್ನು ಪಾಲಿಕೆ ಸದಸ್ಯರು ತರಾಟೆಗೆ ತೆಗೆದುಕೊಂಡ ಪರಿ.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಬಗ್ಗೆ ಕಾವೇರಿದ ಚರ್ಚೆ ನಡೆಯಿತು.

ADVERTISEMENT

ಸಭೆಯಲ್ಲಿ ಮಾತನಾಡಿದ ಬಹುತೇಕ ಸದಸ್ಯರು ಜಲಮಂಡಳಿ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.

‘24X7 ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಕಳೆದ ಸಭೆಯಲ್ಲೇ ಠರಾವು ಪಾಸ್ ಮಾಡಲಾಗಿತ್ತು. ಆದಾಗ್ಯೂ, ಇದುವರೆಗೆ ಕ್ರಮಕೈಗೊಂಡಿಲ್ಲ. ಹೀಗಾದರೆ ಹೇಗೆ’ ಎಂದು ಖಾರವಾಗಿ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ, ‘₹2.75 ಕೋಟಿ ದಂಡ ವಿಧಿಸಿದ್ದೇವೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರು, ಜೈನ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ಜತೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅವರಿಗೆ ₹9.50 ಕೋಟಿ ಬಾಕಿ ಹಣವನ್ನು ನಾವು ಕೊಡಬೇಕಾಗಿದೆ. ಹೀಗಾಗಿ ವಿಳಂಬವಾಗಿದೆ. ಕೂಡಲೇ ಸಮಸ್ಯೆಯನ್ನು ಬಗೆಹರಿಸಿ ನೀರು ಪೂರೈಕೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ಪ್ರತಿಭಟನೆ ಮಾಡಿದರೆ ನೀರು ಬಿಡುತ್ತೀರಿ, ಯಾವಾಗ ಕೇಳಿದರೂ ವಾರ್ಡ್ ನಂ.22ರಲ್ಲಿ 24X7 ನೀರು ಪೂರೈಕೆ ಆಗುತ್ತಿದೆ ಎಂದು ಹೇಳುತ್ತೀರಿ, ಉಳಿದ ವಾರ್ಡ್‌ನವರು ಏನು ಮಾಡಬೇಕು. ಕಡೇ ಪಕ್ಷ 24X7 ನೀರು ಪೂರೈಕೆಯನ್ನು ಸದ್ಯಕ್ಕೆ ಕೈಬಿಟ್ಟು, ಎಲ್ಲಾ ವಾರ್ಡ್‌ಗಳಿಗೆ ವಾರದಲ್ಲಿ ಮೂರು ದಿನ, 2 ರಿಂದ 3 ಗಂಟೆ ನೀರು ಬಿಡಬೇಕು’ ಎಂದು ಒತ್ತಾಯಿಸಿದರು.

‘ಜಲಮಂಡಳಿ ಅಧಿಕಾರಿ ಚೌಗಲಾ ಎಂಬುವರು ಅಕ್ರಮದಲ್ಲಿ ತೊಡಗಿದ್ದಾರೆ. ಅವರ ಮೇಲೆ ₹43 ಲಕ್ಷ ಹಣ ದುರುಪಯೋಗ ಆರೋಪವಿದೆ. ಆದ್ದರಿಂದ ಅವರನ್ನು ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಬಿ.ಪಾಟೀಲ ಮಾತನಾಡಿ, ‘ಎಲ್ಲರೂ ಪಕ್ಷ ಭೇದ ಮರೆತು ನಗರದ ಅಭಿವೃದ್ಧಿಗೆ ಕೆಲಸ ಮಾಡೋಣ. ಪಾಲಿಕೆಯಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ಹಣ ಕೇಳಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು’ ಎಂದು ಆಯುಕ್ತರಿಗೆ ಸೂಚಿಸಿದರು.

ಮೇಯರ್ ಶ್ರೀದೇವಿ ಲೋಗಾಂವಿ, ಉಪ ಮೇಯರ್ ಗೋಪಾಲ ಘಟಕಾಂಬಳೆ, ಪಾಲಿಕೆ ಆಯುಕ್ತ ಔದ್ರಾಮ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಉಮೇಶ ವಂದಾಲ, ರಾಜಶೇಖರ ಮಗಿಮಠ, ಅಲ್ತಾಫ್ ಅಮೀರ್‌ಸಾಬ್ ಇಟಗಿ, ಅಬ್ದುಲ್ ರಜಾಕ್ ಅಬ್ದುಲ್ ಹಮೀದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.