ADVERTISEMENT

ಝಳಕಿ ಪಿಎಸ್‌ಐ ವಿರುದ್ಧ ಐಜಿಪಿಗೆ ದೂರು

ಅಧಿಕಾರ ದುರುಪಯೋಗ, ಭ್ರಷ್ಟಾಚಾರದಲ್ಲಿ ಭಾಗಿ ಆರೋಪ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 11:46 IST
Last Updated 11 ಜುಲೈ 2020, 11:46 IST

ವಿಜಯಪುರ: ಝಳಕಿ ಠಾಣೆ ಪಿಎಸ್‌ಐ ಪರಶುರಾಮ ಮನಗೂಳಿ ಅವರು ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸಿ, ಸೇವೆಯಿಂದ ಅಮಾನತು ಮಾಡಬೇಕು ಎಂದು ಉತ್ತರ ವಲಯ ಐಜಿಪಿ ಅವರಿಗೆ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಪ್ರೊ.ರಾಜು ಅಲಗೂರ ದೂರು ನೀಡಿದ್ದಾರೆ.

ಪಿಎಸ್‌ಐ ಅವರು ಠಾಣಾ ವ್ಯಾಪ್ತಿಯ ಹಳ್ಳಿಗಳಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಅವಕಾಶ ನೀಡಿ, ಅಂಗಡಿಕಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಅಲ್ಲದೇ, ಪಡಿತರವನ್ನು ಅಕ್ರಮವಾಗಿ ಮಾರಾಟ ಮಾಡುವ ಮಾಫಿಯಾಗಳೊಂದಿಗೆ ಶಾಮೀಲಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳ ಮೂಲಕ ವಿವಿಧ ರಾಜ್ಯಗಳಿಗೆ ಅಕ್ರಮವಾಗಿ ಪಡಿತರ ಸಾಗಾಟವಾಗುತ್ತಿದ್ದರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ಐಜಿಪಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ನಡೆದ ಚುನಾವಣೆ ವೇಳೆ ಝಳಕಿ ಐ.ಬಿ.ಯಲ್ಲಿ ಮೂರ್ನಾಲ್ಕು ಸದಸ್ಯರಿಗೆ ಔತಣಕೂಟ ಏರ್ಪಡಿಸಿ, ಚುನಾವಣಾ ರಾಜಕೀಯದಲ್ಲಿ ಪಾಲ್ಗೊಂಡಿದ್ದಾರೆ. ಅನಾರೋಗ್ಯ ಎಂದು ಸುಳ್ಳು ಕಾರಣ ನೀಡಿ ರಜೆ ಪಡೆದು, ಜಿಲ್ಲಾ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯರೊಬ್ಬರ ಪರವಾಗಿ ಬೆಂಗಳೂರಿಗೆ ತೆರಳಿ ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಬಂದಿದ್ದಾರೆ ಎಂದು ಅವರು ದೂರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.