ವಿಜಯಪುರ: ನಗರದ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಕೂಡಲೇ ಮುಕ್ತಾಯಗೊಳಿಸಿ, ಕ್ರೀಡಾಪಟುಗಳ ದೈನಂದಿನ ತರಬೇತಿಗಾಗಿ ಲೋಕಾರ್ಪಣೆಗೊಳಿಸಲು ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಸಮಿತಿಯಿಂದ ಕೈಗೊಳ್ಳಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕ್ರೀಡಾಂಗಣವನ್ನು ಸುಸಜ್ಜಿತ ರೀತಿಯಲ್ಲಿ ಪೂರ್ಣಗೊಳಿಸಬೇಕು, ಕ್ರೀಡಾ ಇಲಾಖೆಯಲ್ಲಿರುವ ಮೊತ್ತದಲ್ಲಿ ಬಾಕಿ ಕಾಮಗಾರಿಗಳನ್ನು ಪ್ರಾರಂಭಿಸಲು ಸೂಚಿಸಿದರು.
ನಗರದ ಭೂತನಾಳ ಗ್ರಾಮದ ಹತ್ತಿರ ನಿರ್ಮಿಸುತ್ತಿರುವ ಸೈಕ್ಲಿಂಗ್ ವೆಲೋಡ್ರೋಂ ಕಳೆದ 3 ವರ್ಷಗಳಿಂದ ಸ್ಥಗಿತಗೊಂಡಿದ್ದು, ಪುನಃ ಕಾಮಗಾರಿಯನ್ನು ಪ್ರಾರಂಭಿಸಲು ತಾಂತ್ರಿಕ ಸಮಿತಿಯಿಂದ ಪರಿಶೀಲಿಸಿ ನಂತರ ಕಾಮಗಾರಿಯನ್ನು ಪ್ರಾರಂಭಿಸಲು ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಕನಕದಾಸ ಬಡಾವಣೆಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನದಲ್ಲಿ ನಿರ್ಮಿಸಲಾಗುತ್ತಿರುವ ಒಳಾಂಗಣ ಈಜುಕೊಳ ಕಾಮಗಾರಿ ಪೂರ್ಣಗೊಂಡಿದ್ದು, ಕ್ರೀಡಾ ಇಲಾಖೆಯಿಂದಲೇ ಈಜುಕೊಳ ನಿರ್ವಹಿಸಲು ಸೂಚಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಸಿಂಥೆಟಿಕ್ ಅಥ್ಲೇಟಿಕ್ ಟ್ರ್ಯಾಕ್, ವಾಲಿಬಾಲ್ ಮೈದಾನ ಹಾಗೂ ಕನಕದಾಸ ಬಡಾವಣೆಯಲ್ಲಿರುವ ಈಜುಕೊಳವನ್ನು ಕ್ರೀಡಾಪಟುಗಳು, ಸಾರ್ವಜನಿಕರು, ಶಿಕ್ಷಣ, ಸಂಘ-ಸಂಸ್ಥೆಯವರು ಸಮರ್ಪಕವಾಗಿ ಉಪಯೋಗಿಸಲು ಕನಿಷ್ಠ ಶುಲ್ಕವನ್ನು ನಿಗದಿಪಡಿಸಲು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ, ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ, ಡಿ.ವೈ.ಎಸ್.ಪಿ ಲಕ್ಷ್ಮೀನಾರಾಯಣ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ, ಕೆ.ಆರ್.ಐ.ಡಿ.ಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಮ್ಮರಾಜಪ್ಪ, ಕ್ರೀಡಾ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹರೀಶ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಹಿರೇಗೌಡರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.