ವಿಜಯಪುರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಿರಿಯ ನಾಯಕರಾಗಿದ್ದಾರೆ. ಈ ಇಬ್ಬರು ನಾಯಕರು ಬಿ.ಜೆ.ಪಿ. ಸೇರುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ತಮ್ಮ ಪಕ್ಷದ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಅಲಗೂರ ಹೇಳಿದ್ದಾರೆ.
ಕಟೀಲ್ ಅವರನ್ನು ಎಲ್ಲಿಯವರೆಗೆ ರಾಜ್ಯ ಘಟಕದ ಅಧ್ಯಕ್ಷರಾಗಿ ಇಟ್ಟುಕೊಂಡಿರುತ್ತಾರೆಯೊ ಅಲ್ಲಿಯವರೆಗೆ ಬಿ.ಜೆ.ಪಿ.ಗೆ ಉಳಿಗಾಲವಿಲ್ಲ. ಬಿ.ಜೆ.ಪಿ. ಪಕ್ಷ ಎಷ್ಟು ಬೇಗ ಇವರನ್ನು ಹೊರಗೆ ಹಾಕುತ್ತದೆಯೋ ಅಷ್ಟು ಒಳ್ಳೆಯದು ಎಂದಿದ್ದಾರೆ.
ಕಟೀಲ್ ಅವರನ್ನು ಬಿ.ಜೆ.ಪಿ. ಯಿಂದ ಹೊರಗೆ ಹಾಕಿದ ಮೇಲೆ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ್ಲ. ನಳಿನ್ಕುಮಾರ್ ಕಟೀಲ್ ಒಬ್ಬ ಜೋಕರ್, ಅವರ ಮೆದುಳಿಗೂ ಮತ್ತು ಬಾಯಿಗೂ ಕನೆಕ್ಷನ್ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
2023ಕ್ಕೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು, ಇವರ ಅಂಗಡಿ ಬಂದ ಆಗಲಿದೆ. ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಇದೇ ರೀತಿ ಹಗುರವಾಗಿ ನಾಲಿಗೆ ಹರಿಬಿಟ್ಟು ಅದನ್ನ ರೆಕಾರ್ಡ್ ಮಾಡಿ ಮಾಧ್ಯಮಗಳಲ್ಲಿ ಪ್ರಸಾರವಾಗಿರುವುದನ್ನು ಇಡೀ ರಾಜ್ಯದ ಜನತೆ ನೋಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.