ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ‘ಜನಧ್ವನಿ’ ಪ್ರತಿಭಟನಾ ಧರಣಿ ನಡೆಸಲಾಯಿತು.
ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸುವ ಮೂಲಕಭೂಸುಧಾರಣಾ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಅತಿವೃಷ್ಟಿಯಿಂದ ಹಾನಿಗೊಳಗಾದ ನಿರಾಶ್ರಿತರಿಗೆ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಕೊರೊನಾ ನಿಯಂತ್ರಣ ಕಾರ್ಯಕ್ರಮದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಈ ಪ್ರಕರಣವನ್ನು ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಬಿಜೆಪಿ ಸರ್ಕಾರ ರೈತರ, ಕಾರ್ಮಿಕರ, ಬಡವರ ಮೇಲೆ ಸವಾರಿ ಮಾಡಿ, ಉದ್ಯಮಿಗಳ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರ ತಕ್ಷಣ ರಾಜೀನಾಮೆ ನೀಡಿ, ಚುನಾವಣೆಗೆ ಹೋಗಬೇಕು ಎಂದರು.
ಇಡೀ ಜಗತ್ತು ಇಂದು ಕೋವಿಡ್ ರೋಗದಿಂದ ಬಳಲುತ್ತಿದ್ದು, ಸರಿಯಾಗಿ ಔಷಧೋಪಚಾರ ನೀಡದೆ ಜನರನ್ನು ಮೃತ್ಯುಕೂಪಕ್ಕೆ ತಳ್ಳುತ್ತಿದೆ. ಭ್ರಷ್ಟಾಚಾರ ನಡೆಸಿರುವ ಸಚಿವರು, ಅಧಿಕಾರಿಗಳನ್ನು ಜೈಲಿಗೆ ತಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯಪಾಲರು ತಕ್ಷಣ ಮಧ್ಯಸ್ಥಿಕೆ ವಹಿಸಿ, ಭ್ರಷ್ಟ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಜಿಲ್ಲಾ ಕಾಂಗ್ರೆಸ್ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಬ್ದುಲ್ ಖಾದರ ಖಾದೀಮ್,ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಕೆ.ಎಫ್.ಅಂಕಲಗಿ, ರೇವಣಸಿದ್ದ ಭಾವಿಕಟ್ಟಿ, ವಿಜಯಕುಮಾರ ಘಾಟಗೆ, ಸುರೇಶ ಘೊಣಸಗಿ, ಚಾಂದಸಾಬ್ ಗಡಗಲಾವ, ಜಮೀರ ಬಕ್ಷಿ, ಆರತಿ ಶಹಾಪೂರ, ಶ್ರೀದೇವಿ ಉತ್ಲಾಸಕರ, ಗಂಗಾಧರ ಸಂಬಣ್ಣಿ, ಇರ್ಫಾನ್ ಶೇಖ, ಸಂತೋಷ ಪಾಟೀಲ, ಸಾಹೇಬಗೌಡ ಬಿರಾದಾರ, ಜಮೀರ್ ಅಹ್ಮದ್ ಬಾಗಲಕೋಟ, ಮಲ್ಲನಗೌಡ ಬಿರಾದಾರ, ಡಿ.ಎಚ್.ಕಲಾಲ, ವಸಂತ ಹೋನಮೊಡೆ ಇದ್ದರು.
ಪುಷ್ಪಾಂಜಲಿ
ಮಾಜಿ ಪ್ರಧಾನಿ ದಿ.ರಾಜೀವ್ಗಾಂಧಿ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಇಬ್ಬರ ಭಾವಚಿತ್ರಗಳಿಗೆ ಪುಷ್ಪಾಂಜಲಿ ಅರ್ಪಿಸಿ, ಜನ್ಮದಿನ ಆಚರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.