
ತಾಳಿಕೋಟೆ: ಭಾರತದ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಅದು ಎಲ್ಲ ದೇಶವಾಸಿಗಳ ಹಿತ ಬಯಸುತ್ತದೆ. ಜಾತಿ, ವರ್ಗ ಹಾಗೂ ಧರ್ಮದ ಆಧಾರದಲ್ಲಿ ವ್ಯತ್ಯಾಸ ಮಾಡದೇ ನಾವೆಲ್ಲರೂ ಭಾರತೀಯರು ನಾವೆಲ್ಲ ಒಂದು ಎಂಬ ಭಾವನೆ ಎಲ್ಲರಲ್ಲೂ ಬರಬೇಕಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕಾಡಳಿತದಿಂದ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ನಮಗೆ ವಿಶ್ವ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ. ಅದರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು. ಸಂವಿಧಾನದಿಂದಲೇ ದೇಶ ಸದೃಢವಾಗಲು ಸಾಧ್ಯ, ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ಸಮರ್ಪಿಸಿದ ಮಹಾತ್ಮ ಗಾಂಧಿ ಆದಿಯಾಗಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸದಾ ಸ್ಮರಿಸಬೇಕೇ ವಿನಃ, ದುರ್ಬಲಗೊಳಿಸುವ ಕಾರ್ಯ ಮಾಡಬಾರದು ಎಂದರು.
ವಿವಿಧ ಕ್ಷೇತ್ರದ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿಯ ಎಲ್.ಕೆ.ಜಿ. ಮತ್ತು ಯುಕೆಜಿ ಮಕ್ಕಳಿಗೆ ಕೊಡಮಾಡಿದ ಸ್ಮಾರ್ಟ್ ಟಿವಿಗಳನ್ನು ಶಾಸಕರ ನಾಡಗೌಡರು ವಿತರಿಸಿದರು. ತಹಶೀಲ್ದಾರ್ ವಿನಯಾ ಹೂಗಾರ ಧ್ವಜಾರೋಹಣ ನೆರವೇರಿಸಿದರು.
ತಾ.ಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಸಿಡಿಪಿಒ ಶಿವಮೂರ್ತಿ ಕುಂಬಾರ, ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ. ದಮ್ಮೂರಮಠ, ಗ್ಯಾರಂಟಿ ಸಮಿತಿಯ ಸಂಗಮೇಶ ದೇಸಾಯಿ, , ಪಿಎಸ್ಐ ಜ್ಯೋತಿ ಖೋತ್ ಇದ್ದರು. ಶಿಕ್ಷಕ ಅನೀಲಕುಮಾರ ಇರಾಜ ಹಾಗೂ ರಾಜು ವಿಜಾಪುರ ಕಾರ್ಯಕ್ರಮ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.