ವಿಜಯಪುರ: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹಿಂದಿನ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತರ್ಲೆ ಅವರ ವಿಜಯಪುರ ಮತ್ತು ಸೋಲಾಪುರ ನಗರದಲ್ಲಿರುವ ಮನೆಗಳ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ₹2 ಕೋಟಿ ಮೊತ್ತದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕೋರ್ಟ್ನಿಂದ ವಾರಂಟ್ ಪಡೆದು, ವಿಜಯಪುರದ ಚಾಣಕ್ಯ ನಗರದಲ್ಲಿರುವ ಮನೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಸೋಲಾಪುರ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದರು.
ದಾಳಿಯ ವೇಳೆ ₹ 10 ಲಕ್ಷ ನಗದು, ಬೆಳ್ಳಿ, ಬಂಗಾರದ ಆಭರಣಗಳು, ವಾಹನಗಳು ಮತ್ತು ಇತರೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆ ಪತ್ರಗಳು ದೊರೆತಿದ್ದು, ಅಂದಾಜು ₹2 ಕೋಟಿಗೂ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ ಎಂದು ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ್ ತಿಳಿಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಸುರೇಶ ರೆಡ್ಡಿ, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಆನಂದ ವಿ.ಟಕ್ಕನ್ನವರ್, ಸಿಬ್ಬಂದಿ ಆನಂದ ಡೋಣಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.