ವಿಜಯಪುರ: ಜಿಲ್ಲೆಯ ಪ್ರಮುಖ ಬೆಳೆಯಾದ ಬಿಳಿಜೋಳ, ದ್ರಾಕ್ಷಿ, ಒಣದ್ರಾಕ್ಷಿ ಹಾಗೂ ಲಿಂಬೆ ಬೆಳೆಗೆ ಸೂಕ್ತ ಮಾರುಕಟ್ಟೆ ಒದಗಿಸುವ ಜೊತೆಗೆ ಆಹಾರ ಸಂಸ್ಕರಣೆಗೆ ಅನುಕೂಲವಾಗುವ ಯೋಜನಾ ವರದಿಯೊಂದನ್ನು ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಕೌಶಲ ಮಿಷನ್ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಮಹಾರಾಷ್ಟ್ರದಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಉತ್ತೆಜನ ನೀಡಲು ಮಹಾಗ್ರೇಪ್ಸ್ ಎಂಬ ಸಂಸ್ಥೆಯಡಿ ಸೂಕ್ತಬೆಲೆ, ಮಾರುಕಟ್ಟೆ ವ್ಯವಸ್ಥೆ, ಸಂಪರ್ಕ ಕಲ್ಪಿಸಲಾಗಿದೆ. ಅದರಂತೆ, ವಿಜಯಪುರ ಜಿಲ್ಲೆಯ ಹಲವು ಬೆಳೆಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಲೆ ಮತ್ತು ಮಹತ್ವ ದೊರಕಿಸಲು ಸೂಕ್ತ ಯೋಜನೆ ರೂಪಿಸಬೇಕಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಜಿಲ್ಲೆಯಲ್ಲಿ ಸಂಭಾವ್ಯ ಕ್ಷೇತ್ರಗಳ ಕುರಿತು ಸಮಗ್ರ ಸಮೀಕ್ಷೆ ನಡೆಸಲಾಗಿದ್ದು, ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಸೂಕ್ತ ಉತ್ತೇಜನ ನೀಡಿವುದು ಅವಶ್ಯಕವಾಗಿದೆ ಎಂದರು.
ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೆಷ್ಮೇ ಮತ್ತು ರೈತ ಉತ್ಪಾದಕರ ಸಂಘಗಳ ಮಧ್ಯ ಸಮನ್ವಯ ಏರ್ಪಡಿಸುವ ಅಗತ್ಯವಿದೆ. ಇದರಿಂದ ರೈತರ ಸ್ಥಿತಿ ಸುಧಾರಣೆಯಾಗಲಿದೆ. ಉದ್ಯೋಗಕ್ಕೂ ನೆರವಾಗಲಿದೆ ಎಂದರು.
ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಖಾಸಗಿ ಉದ್ಯಮೆಗಳ ಮಾಲೀಕರು ಸೇರಿದಂತೆ ಕೌಶಲಾಭಿವೃದ್ಧಿ ಇಲಾಖೆಯ ಅಧಿಕಾರಿ ರಮೇಶ ದೇಸಾಯಿ ಸಭೆಯಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.