ADVERTISEMENT

ಕಾಮಗಾರಿಗೂ ಮುನ್ನಾ ಅನುಮತಿ ಕಡ್ಡಾಯ; ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್

ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 12:47 IST
Last Updated 28 ಆಗಸ್ಟ್ 2021, 12:47 IST
ವಿಜಯಪುರ ನಗರದ ಮೀನಾಕ್ಷಿ ಚೌಕದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಕೈಗೊಂಡ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ವೀಕ್ಷಿಸಿದರು. ಮಹಾನಗರ ಪಾಲಿಕೆ ಆಯುಕ್ತ ವಿಜಯ್‌ ಮೆಕ್ಕಳಕಿ ಇದ್ದಾರೆ
ವಿಜಯಪುರ ನಗರದ ಮೀನಾಕ್ಷಿ ಚೌಕದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಕೈಗೊಂಡ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ವೀಕ್ಷಿಸಿದರು. ಮಹಾನಗರ ಪಾಲಿಕೆ ಆಯುಕ್ತ ವಿಜಯ್‌ ಮೆಕ್ಕಳಕಿ ಇದ್ದಾರೆ   

ವಿಜಯಪುರ:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಅನುಷ್ಠಾನ ಮಾಡುವ ಮುನ್ನ ಸಂಬಂಧಿಸಿದ ಇಲಾಖೆಗಳು ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಗೆ ಗಮನಕ್ಕೆ ಕಡ್ಡಾಯವಾಗಿ ತರಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಸೂಚಿಸಿದರು.

ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಸ್ಥಳಗಳಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದನಗರದ ಜುಮ್ಮಾ ಮಸೀದಿ ಹತ್ತಿರ ಕುಡಿಯುವ ನೀರಿನ ಕಾಮಗಾರಿಗಾಗಿ ಅಗೆದ ರಸ್ತೆಯ ಭಾಗವನ್ನು ಒಂದು ವಾರದಲ್ಲಿ ಪುನರ್‌ ಸ್ಥಾಪಿಸಿ ಸಾರ್ವಜನಿಕರ ಮತ್ತು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಜುಮ್ಮಾ ಮಸೀದಿ ವ್ಯಾಪ್ತಿಯ ಪರಿಸರ ಸ್ವಚ್ಛತೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆ ಆಯುಕ್ತರಿಗೆ ತಿಳಿಸಿದರು.

ನಗರದ ಮೀನಾಕ್ಷಿ ಚೌಕ(ಹುತಾತ್ಮರ ವೃತ್ತ)ದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ 14ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕೈಗೊಂಡ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಒಳಚರಂಡಿ, ಮ್ಯಾನ್‌ಹೋಲ್‍ಗಳ ಗುಣಮಟ್ಟ ಹಾಗೂ ರಸ್ತೆಯ ಮಟ್ಟಕ್ಕೆ ನಿರ್ಮಿಸಲು ಪಾಲಿಕೆ ಎಂಜಿನಿಯರ್‌ಗಳಿಗೆ ತಿಳಿಸಿದರು.

ಬಬಲೇಶ್ವರ ನಾಕಾದ ಹತ್ತಿರ ಕಾಮಗಾರಿ ನಡೆಯುವ ಸ್ಥಳದಲ್ಲಿ ಗುಂಪಾಗಿ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಪಾಲಿಕೆ ಸಿಬ್ಬಂದಿಗೆ ತಿಳಿಸಿದರು.

ಜೋಡಗುಮ್ಮಟ ಹತ್ತಿರದಲ್ಲಿ ಅಲ್ಪಸಂಖ್ಯಾತರ ಪ್ರದೇಶಗಳ ಅಭಿವೃದ್ಧಿ ಅನುದಾನದಲ್ಲಿ ಸಿ.ಸಿ ರಸ್ತೆ ಕಾಮಗಾರಿ ಕೈಗೊಳ್ಳುವ ಪೂರ್ವದಲ್ಲಿ ಒಳಚರಂಡಿ ಸಂಪರ್ಕವನ್ನು ಪಡೆಯಲು ಸಾರ್ವಜನಿಕರಿಗೆ ತಿಳಿಸಿದರು.

ಗೋದಾವರಿ ಹೋಟೆಲ್‌ನಿಂದ ಇಟಗಿ ಪೆಟ್ರೋಲ್ ಪಂಪ್‌ ವರೆಗೆ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ರಸ್ತೆ ಹಾಗೂ ತೆರೆದ ಚರಂಡಿ ಕಾಮಗಾರಿಯನ್ನು ವೀಕ್ಷಿಸಿದರು.

ಮಹಾನಗರ ಪಾಲಿಕೆ ಆಯುಕ್ತ ವಿಜಯ್‌ ಮೆಕ್ಕಳಕಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಎಂಜಿನಿಯರ್‌ ಎಸ್.ಎ. ಇನಾಮದಾರ, ಪಾಲಿಕೆ ಕಾರ್ಯನಿರ್ವಾಹಕಎಂಜಿನಿಯರ್‌ ಡಿ.ಎಚ್. ಕಿರೇಸೂರ ಮತ್ತು ವಿ. ಎಸ್. ಹೊನ್ನಳ್ಳಿ, ಜಲಮಂಡಳಿ ಕಾರ್ಯನಿರ್ವಾಹಕ ಎಂಜಿನಿಯರ್‌ ಎಸ್. ಎಸ್. ಪಟ್ಟಣಶೆಟ್ಟಿ, ಮಹಾನಗರಪಾಲಿಕೆ ಮತ್ತು ಜಲಮಂಡಳಿ ಎಂಜಿನಿಯರ್‌ಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.