ವಿಜಯಪುರ: ಬಸವನಬಾಗೇವಾಡಿ ತಾಲ್ಲೂಕಿನ ಮುಳವಾಡ ಕೈಗಾರಿಕಾ ಪ್ರದೇಶಗಳಲ್ಲಿ ಅರ್ಹ ಫಲಾನುಭವಿಗಳಿಗೆನಿವೇಶನ ಹಂಚಿಕೆ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೆ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಹಂಚಿಕೆಗಾಗಿ ಕಾಯ್ದಿರಿಸಲಾದ ಜಮೀನಿನಲ್ಲಿ ವಿವಿಧ ಅಳತೆಯ 147 ಕೈಗಾರಿಕಾ ನಿವೇಶನಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಪೈಕಿ 47 ನಿವೇಶನಗಳನ್ನು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಕಾಯ್ದಿರಿಸಿದ್ದು, ಈ ನಿವೇಶನಗಳಿಗೆ ಸಂಬಂಧಿಸಿದಂತೆ ಎಸ್.ಒ.ಪಿ (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೋಸಿಜರ್) ತಯಾರಿಸಿ ಹಂಚಿಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧೀನದಲ್ಲಿ ಬರುವ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ನಿರ್ದೇಶನ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದರು.
ವಿವಿಧ ಉತ್ಪಾದನಾ ಉದ್ಯೋಗಕ್ಕಾಗಿ ನೀಡಲಾದ ನಿವೇಶನಗಳು ಸಮರ್ಪಕವಾಗಿ ಬಳಕೆಯಾಗುವಂತೆ ಸೂಚಿಸಿದರು.
ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶ ಅಲಿಯಾಬಾದ್ ಹಂತ-1 ಮತ್ತು 2ರಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ, ಉನ್ನತಿಕರಣ, ಕೈಗಾರಿಕಾ ಸ್ಥಾಪನೆಗೆ ಸ್ವಾಧೀನ ಪಡಿಸಿಕೊಂಡ ಭೂಮಿ ಅಭಿವೃದ್ಧಿ, ಸಣ್ಣ ಕೈಗಾರಿಕಾ ಉದ್ಯಮಿದಾರರಿಗೆ ನಿವೇಶನ ಹಂಚಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ ಸಿ ಮತ್ತು ಡಿ ಮಾದರಿ ಮಳಿಗೆಗಳ ಹಂಚಿಕೆ, ವಿವಿಧ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.