ವಿಜಯಪುರ: ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ.ದಾನಮ್ಮನವರ ಬುಧವಾರ ತಿಕೋಟಾ ಮತ್ತು ಬಬಲೇಶ್ವರ ತಾಲ್ಲೂಕುಗಳಲ್ಲಿ ಪ್ರವಾಸ ಕೈಗೊಂಡು, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ತಿಕೋಟಾ ತಾಲ್ಲೂಕಿಗೆ ಆರಂಭದಲ್ಲಿ ಭೇಟಿ ನೀಡಿ, ಅಂದಾಜು ₹10 ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಆಡಳಿತ ಭವನದ ಕಾಮಗಾರಿಯ ಬಗ್ಗೆ ಅಲ್ಲಿನ ತಹಶೀಲ್ದಾರ್ ಮಲ್ಲಿಕಾರ್ಜುನ ಅರಕೇರಿ ಅವರಿಂದ ಮಾಹಿತಿ ಪಡೆದರು. ಆಡಳಿತ ಭವನದ ಕಾಮಗಾರಿ ಆರಂಭ, ಆಡಳಿತ ಭವನ ಒಳಗೊಳ್ಳುವ ಕಚೇರಿಗಳ ಮಾಹಿತಿ ಪಡೆದುಕೊಂಡರು.
ವಿಧಾನ ಪರಿಷತ್ ಚುನಾವಣೆಯ ಮತಗಟ್ಟೆ ಕೇಂದ್ರಗಳಾಗಿ ಗುರುತಿಸಿದ ತಿಕೋಟಾದ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಗೆ ಸಹ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು. ಆ ಶಾಲೆಯಲ್ಲಿನ ಮಕ್ಕಳ ಹಾಜರಾತಿ, ಬಿಸಿಯೂಟದ ವ್ಯವಸ್ಥೆ, ಶಿಕ್ಷಕರ ಹಾಜರಾತಿಯ ವಿವರ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ, ಕಚೇರಿಯಲ್ಲಿನ ಕಡತಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕಚೇರಿಯ ಯಾವುದೇ ಕಡತಗಳು ಕಾಲಕಾಲಕ್ಕೆ ವಿಲೇವಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ಎಲ್ಲ ಅಧಿಕಾರಿಗಳು, ವಿಷಯ ನಿರ್ವಾಹಕರಿಗೆ ಸೂಚಿಸಿದರು. ಬಳಿಕ ನಾಡಕಚೇರಿ, ಸಾರ್ವಜನಿಕ ಗ್ರಂಥಾಲಯಗಳಿಗೂ ಸಹ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು.
ಬಳಿಕ ಜಿಲ್ಲಾಧಿಕಾರಿಗಳು ಬಬಲೇಶ್ವರ ತಾಲ್ಲೂಕಿಗೆ ಭೇಟಿ ನೀಡಿ, ಬಬಲೇಶ್ವರದಲ್ಲಿ ₹10 ಕೋಟಿ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.
ಕಾಮಗಾರಿಯು ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ತ್ವರಿತಗತಿಯಲ್ಲಿ ಕಾಮಗಾರಿಯನ್ನು ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಬಬಲೇಶ್ವರ ತಹಶೀಲ್ದಾರ್ ಸಂತೋಷ ಮ್ಯಾಗೇರಿ ಮಾಹಿತಿ ನೀಡಿದರು.
ಬಳಿಕ ಜಿಲ್ಲಾಧಿಕಾರಿಗಳು, ಕರ್ನಾಟಕ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಮತಗಟ್ಟೆ ಕೇಂದ್ರಗಳೆಂದು ಗುರುತಿಸಿರುವ ಮತಗಟ್ಟೆ ಸಂಖ್ಯೆಗಳಾದ 129, 129ಎ ಬಬಲೇಶ್ವರದ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸಾರವಾಡ ಗ್ರಾಮದಲ್ಲಿರುವ ಗ್ರಾಮ್ ಒನ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲಿಸಿದರು.
ತಾ.ಪಂ. ಇಓ ಆರ್.ಎ.ಪಠಾಣ, ತಿಕೋಟಾ ಪಟ್ಟಣ ಪಂಚಾಹಿತಿಯ ಮುಖ್ಯಾಧಿಕಾರಿ ಎಚ್.ಎ.ದಾಲಾಯತ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮುಜುಂದಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.