ನಿಡಗುಂದಿ (ಬಸವನಬಾಗೇವಾಡಿ) : ವಿವಿಧ ಕೆಲಸ ಕಾರ್ಯಗಳಿಗಾಗಿ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಿ. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳದೇ ನಿಗದಿತ ಸಮಯದಲ್ಲಿ ವಿಲೇವಾರಿಗೆ ಕ್ರಮವಹಿಸಬೇಕು. ಕಚೇರಿ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ತಹಶೀಲ್ದಾರ ಕಚೇರಿ ಎದುರಿನ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ನ್ಯಾಯ ಬೆಲೆ ಅಂಗಡಿಯಲ್ಲಿ ಸ್ಟಾಕ್ ರಜಿಸ್ಟರ್ ನಿರ್ವಹಣೆ ಮಾಡಿ ಗ್ರಾಹಕರಿಗೆ ನಿಗದಿತ ಅವಧಿಯಲ್ಲಿ ಆಹಾರ ಧಾನ್ಯಗಳನ್ನು ಎಲ್ಲ ಪಡಿತರ ಚೀಟಿದಾರರಿಗೆ ಹಂಚುವಂತೆ ಸೂಚಿಸಿದರು. ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಪರಿಶೀಲನೆ ನಡೆಸಿ, ನಗರದಾದ್ಯಂತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಸ ಕಂಡಲ್ಲಿ ಫೋಟೋ ಕಳುಹಿಸಿ ಅಭಿಯಾನವನ್ನು ಸಮರ್ಪಕವಾಗಿ ಜಾರಿಗೊಳಿಸಿ ಕಸಮುಕ್ತವಾಗಿಸಲು ಕ್ರಮ ವಹಿಸಬೇಕು ಎಂದರು. ಕಸ ವಿಲೇವಾರಿ ಘಟಕ ಸ್ಥಾಪನೆಗೆ ಗುರುತಿಸಲಾದ ಸ್ಥಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ತಾಲ್ಲೂಕಾಸ್ಪತ್ರೆಗೆ ಭೇಟಿ ನೀಡಿ ಔಷಧ ವಿತರಣೆ ಕೌಂಟರ್, ಸೇರಿದಂತೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಒದಗಿಸಲಾಗುತ್ತಿರುವ ಚಿಕಿತ್ಸೆ ಕುರಿತು ಪರಿಶೀಲನೆ ನಡೆಸಿ, ಮಕ್ಕಳು, ಗರ್ಭೀಣಿಯರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚಿಸಿ ಡಯಾಬಿಟಿಸ್ ಕೇಂದ್ರವನ್ನು ಪರಿಶೀಲಿಸಿದರು.
ಆಲಮಟಿಯ ಮರಿಮಟ್ಟಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳಿಗೆ ಒದಗಿಸಲಾಗುತ್ತಿರುವ ಚಿತ್ರಾನ್ನ-ಮೊಟ್ಟೆಯನ್ನು ಸ್ವತ: ಜಿಲ್ಲಾಧಿಕಾರಿಗಳು ಸೇವಿಸಿ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು. ನಂತರ ಆಲಮಟ್ಟಿ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರಕ್ಕೆ ಬರುವ ಸಾರ್ವಜನಿಕರಿಗೆ ಸಕಾಲಕ್ಕೆ ಮಾಹಿತಿ ನೀಡಬೇಕು. ಕೇಂದ್ರದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಈ ವೇಳೆ ನಿಡಗುಂದಿ ತಹಶೀಲ್ದಾರ ಎ.ಡಿ.ಅಮರಾವದಗಿ, ಪ.ಪಂ ಮುಖ್ಯಾಧಿಕಾರಿ ಪ್ರತಾಪ ಕೊಡಗೆ, ಸಿಡಿಪಿಒ ಶಿಲ್ಪಾ ಹಿರೇಮಠ, ವೈದ್ಯಾಧಿಕಾರಿ ಪ್ರಕಾಶ ಗೋಡಕಿಂಡ್ಕಿ, ಆಹಾರ ನಿರೀಕ್ಷಕ ಗುತ್ತರಗಿ, ಕಂದಾಯ ನಿರೀಕ್ಷಕ ಸಲೀಮ ಯಲಗೋಡ, ಗ್ರಾಮಾಡಳಿತಾಧಿಕಾರಿ ನಾನಾಗೌಡ ಪಾಟೀಲ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.