ADVERTISEMENT

ಕೋವಿಡ್‌ ರೋಗಿಗಳಿಗೆ ತೊಂದರೆಯಾಗದಿರಲಿ

ಅಧಿಕಾರಿಗಳಿಗೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಮೇ 2021, 12:59 IST
Last Updated 4 ಮೇ 2021, 12:59 IST
ವಿಜಯಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಮಂಗಳವಾರ ಜಿಲ್ಲಾ ಕೋವಿಡ್‌ ಉಸ್ತುವಾರಿ ಅಧಿಕಾರಿ ಡಾ.ಔದ್ರಾಮ್‌ ಅವರೊಂದಿಗೆ ಚರ್ಚಿಸಿದರು
ವಿಜಯಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಮಂಗಳವಾರ ಜಿಲ್ಲಾ ಕೋವಿಡ್‌ ಉಸ್ತುವಾರಿ ಅಧಿಕಾರಿ ಡಾ.ಔದ್ರಾಮ್‌ ಅವರೊಂದಿಗೆ ಚರ್ಚಿಸಿದರು   

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‌ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಸರಿಯಾಗಿ ಹಾಸಿಗೆ, ರೆಮ್‌ಡಿಸಿವಿರ್‌, ಆಮ್ಲಜನಕ, ವೆಂಟಿಲೇಟರ್‌ ಲಭಿಸುತ್ತಿಲ್ಲ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿದ್ದು, ಯಾವೊಬ್ಬ ರೋಗಿಗೂ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಸೂಚಿಸಿದರು.

ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿ ಜಿಲ್ಲಾ ಕೊರೊನಾ ಉಸ್ತುವಾರಿ ಅಧಿಕಾರಿ ಡಾ.ಔದ್ರಾಮ್‌ ಅವರೊಂದಿಗೆ ಜಿಲ್ಲೆಯ ಕೋವಿಡ್‌ ಪರಿಸ್ಥಿತಿ ಕುರಿತು ಚರ್ಚಿಸಿದ ಬಳಿಕ ಮಾತನಾಡಿದರು.

ರೆಮ್‌ಡಿಸಿವಿರ್‌ ಇಂಜೆಕ್ಷನ್‌ ಹಾಗೂ ಆಕ್ಸಿಜನ್‌ ಕೊರತೆಯಿಂದ ರೋಗಿಗಳ ಸಂಬಂಧಿಕರು ಪ್ರತಿದಿನ ಫೋನ್‌ ಕರೆ ಮಾಡಿ ಗೋಗರೆಯುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ADVERTISEMENT

ರೆಮ್‌ಡಿಸಿವಿರ್‌ ಇಂಜೆಕ್ಷನ್‌ ಆಯಾ ಆಸ್ಪತ್ರೆಯವರು ನೇರವಾಗಿ ಸಂಬಂಧಿಸಿದ ಕಂಪನಿಗೆ ಬೇಡಿಕೆ ಸಲ್ಲಿಸಿ ಪಡೆದುಕೊಳ್ಳುತ್ತಿದ್ದಾರೆ ಎಂದು ಕೋವಿಡ್‌ ಉಸ್ತುವಾರಿ ಅಧಿಕಾರಿ ಡಾ.ಔದ್ರಾಮ್‌ ತಿಳಿಸಿದ್ದಾರೆ ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ಹಾಸಿಗೆಗಳು ಖಾಳಿ ಇಲ್ಲದಿದ್ದಾಗ ಸರ್ಕಾರಿ ಆಸ್ಪತ್ರೆಯ ಅನುಮತಿ ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾದರೆ ಅಲ್ಲಿ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ರೆಫರಲ್‌ ಪತ್ರದ ಮೂಲಕ ರೆಮಿಡಿಸಿವಿರ್‌ ಇಂಜೆಕ್ಷನ್‌ ಪಡೆದುಕೊಳ್ಳಲು ಅವಕಾಶ ಇರುತ್ತಿದೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

ಸಚಿವರೇ ಇತ್ತ ಗಮನ ಹರಿಸಿ:

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆಯವರು ಜಿಲ್ಲೆಯಲ್ಲಿ ಎಲ್ಲವೂ ಸರಿ ಇದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ, ವಾಸ್ತವ ಸ್ಥಿತಿ ಬೇರೆಯೇ ಇದೆ. ರೋಗಿಗಳು ಹಾಸಿಗೆ, ರೆಮ್‌ಡಿಸಿವಿರ್‌, ಆಮ್ಲಜನಕ, ವೆಂಟಿಲೇಟರ್‌ ಲಭಿಸಿದೇ ತೊಂದರೆ ಅನುಭವಿಸುತ್ತಿದ್ದು, ಇತ್ತ ಗಮನ ಹರಿಸಬೇಕು ಎಂದು ಸುಜಾತಾ ಕಳ್ಳಿಮನಿ ಆಗ್ರಹಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕೋವಿಡ್‌ ಬಗ್ಗೆ ಸರಿಯಾದ ತಿಳಿವಳಿಕೆ ಇಲ್ಲದೇ ಜನರು ಗಾಬರಿಯಾಗಿದ್ದಾರೆ. ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ಹಳ್ಳಿಗಳಲ್ಲಿ ಪಾಲಿಸುತ್ತಿಲ್ಲ. ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ವಾಸ್ತವ್ಯ ಇದ್ದುಕೊಂಡು, ಅಧಿಕಾರಿ, ಸಿಬ್ಬಂದಿಗಳನ್ನು ಒಳಗೊಂಡ ಕಾರ್ಯಪಡೆದ ರಚಿಸಿ ಕಾರ್ಯನಿರ್ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಾರ್ವಜನಿಕರು ಜನಪ್ರತಿನಿಧಿಗಳೊಂದಿಗೆ ನಿರ್ಭೀತಿಯಿಂದ ಮಾತನಾಡಿದ್ದಷ್ಟು ಅಧಿಕಾರಿಗಳೊಂದಿಗೆ ಮಾತನಾಡುವುದಿಲ್ಲ. ಹೀಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

****

ಜಿಲ್ಲಾ ಉಸ್ತುವಾರಿ ಸಚಿವರು ಆಗಾಗ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿದರೆ ಸಾಲದು, ಜಿಲ್ಲೆಯಲ್ಲೇ ವಾಸ್ತವ್ಯವಿದ್ದು, ಪರಿಸ್ಥಿತಿಯನ್ನು ಅವಲೋಕಿಸಬೇಕು. ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು

–ಸುಜಾತಾ ಕಳ್ಳಿಮನಿ,

ಅಧ್ಯಕ್ಷೆ, ಜಿಲ್ಲಾ ಪಂಚಾಯ್ತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.