ADVERTISEMENT

ಡೋಣಿ ಪ್ರವಾಹ: ಶಾಶ್ವತ ಪರಿಹಾರ ಕಲ್ಪಿಸಲು ಎಂ.ಬಿ.ಪಾಟೀಲ ಒತ್ತಾಯ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 10:27 IST
Last Updated 8 ಆಗಸ್ಟ್ 2022, 10:27 IST
ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಡೋಣಿ ನದಿ ಪ್ರವಾಹಕ್ಕೆ ಒಳಗಾದ ಪ್ರದೇಶಕ್ಕೆ ಸೋಮವಾರ ಶಾಸಕ ಎಂ.ಬಿ.ಪಾಟೀಲ ಭೇಟಿ ನೀಡಿ ಹಾನಿ ಪರಿಶೀಲಿಸಿದರು
ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಡೋಣಿ ನದಿ ಪ್ರವಾಹಕ್ಕೆ ಒಳಗಾದ ಪ್ರದೇಶಕ್ಕೆ ಸೋಮವಾರ ಶಾಸಕ ಎಂ.ಬಿ.ಪಾಟೀಲ ಭೇಟಿ ನೀಡಿ ಹಾನಿ ಪರಿಶೀಲಿಸಿದರು   

ವಿಜಯಪುರ: ಪ್ರತಿ ವರ್ಷ ಮಳೆಗಾಲದಲ್ಲಿ ಡೋಣಿ ನದಿ ಪ್ರವಾಹಕ್ಕೆ ಸಿಲುಕಿ ಬೆಳೆ, ಆಸ್ತಿ, ಪಾಸ್ತಿ ಕಳೆದುಕೊಂಡು ತೊಂದರೆಗೆ ಒಳಗಾಗುವ ಸಂತ್ರಸ್ತರಿಗೆ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಸೇರಿದಂತೆ ಇತರೆ ನೀರಾವರಿ ಯೋಜನೆಗಳಲ್ಲಿ ನೀಡುವ ಪುನರ್ವಸತಿ, ಪುನರ್ ನಿರ್ಮಾಣ (ಆರ್ ಅಂಡ್ ಆರ್) ಮಾದರಿಯಲ್ಲಿ ವೈಜ್ಞಾನಿಕ, ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಎಂ.ಬಿ.ಪಾಟೀಲ ಅವರು ಸರ್ಕಾರವನ್ನು ಒತ್ತಾಯಿಸಿದರು.

ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಡೋಣಿ ನದಿ ಪ್ರವಾಹಕ್ಕೆ ಒಳಗಾದಹೊನವಾಡ, ಕೋಟ್ಯಾಳ, ಹರನಾಳ, ದಾಶ್ಯಾಳ, ಧನ್ಯಾಳ, ಕಣಮುಚನಾಳ, ಸಾರವಾಡ,ಕಾಖಂಡಕಿ, ತೋನಶ್ಯಾಳ, ಹೊನಗನಹಳ್ಳಿ ಗ್ರಾಮಗಳಿಗೆ ತೆರಳಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ನದಿ ಪ್ರವಾಹಕ್ಕೆ ಸಿಲುಕುವ ಜನರನ್ನು ಬೇರೆಡೆಗೆ ಸ್ಥಳಾಂತರಿಸುವ ಮುನ್ನಾ ಅವರ ಭೂಮಿ, ಮನೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಅಲ್ಲದೇ, ಪರ್ಯಾಯ ವ್ಯವಸ್ಥೆ ಮಾಡಬೇಕು, ಪರಿಹಾರಧನ ನೀಡಬೇಕು ಎಂದರು.

ADVERTISEMENT

ಡೋಣಿ ನದಿಯ ಹೂಳು ತೆಗೆದು, ನದಿ ತಿರುವುಗಳನ್ನು ನೇರವಾಗಿಸಿ, ಅಗತ್ಯ ಇರುವೆಡೆ ನದಿ ಆಸುಪಾಸು ತಡೆಗೋಡೆ ನಿರ್ಮಿಸಿದರೆ ಮಾತ್ರ ಡೋಣಿ ಪ್ರವಾಹ ತಡೆಗಟ್ಟಬಹುದು ಎಂದರು.

ಡೋಣಿ ನದಿ ಪ್ರವಾಹ ತಡೆಗೆ ಯೋಜನೆ ಜಾರಿಗೆ ತರಲು ದೊಡ್ಡ ಮೊತ್ತದ ಹಣಕಾಸಿನ ಅಗತ್ಯ ಇರುವುದರಿಂದ ಈ ಹಿಂದೆ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಕೇಂದ್ರ ಸರ್ಕಾರದ ವ್ಯಾಪ್ ಕೋಸ್ ಅಡಿ ₹2400 ಕೋಟಿ ಮೊತ್ತದ ಯೋಜನೆಗೆ ಡಿಪಿಆರ್ ಸಿದ್ದಪಡಿಸಿ, ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಅದು ಸದ್ಯ ನನೆಗುದಿಗೆ ಬಿದ್ದಿದೆ.‌ ಈ ಯೋಜನೆ ಜಾರಿಗೆ ಅಗತ್ಯ ಕ್ರಮಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದರು.

ಬಿಹಾರದಲ್ಲಿ ಕೋಶಿ ನದಿ ಪ್ರವಾಹ ತಡೆಗೆ ಕೇಂದ್ರ ಸರ್ಕಾರ ಅನುಸರಿಸಿದ ಮಾದರಿಯನ್ನು ಡೋಣಿ ನದಿ ವ್ಯಾಪ್ತಿಯಲ್ಲಿ ಜಾರಿಗೆ ತರುವ ಅಗತ್ಯ ಇದೆ ಎಂದು ಅವರು ಪ್ರತಿಪಾದಿಸಿದರು.

ಮಳೆ, ನೆರೆ ಸಂತ್ರಸ್ತರಿಗೆ ಎನ್‌ಡಿಆರ್‌ಎಫ್ ಅಡಿ ನೀಡುವ ಪರಿಹಾರ ಏತಕ್ಕೂ ಸಾಲದು. ಸಂತ್ರಸ್ತರ ಚಪ್ಪಲ್ಲಿ ಕಿಮ್ಮತ್ತು ಪರಿಹಾರ ಇರಲ್ಲ. ಹೀಗಾಗಿ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

****

ಪರ್ಯಾಯ ಸಮಾವೇಶ ಅಸಾಧ್ಯ

ವಿಜಯಪುರ: ಸಿದ್ದರಾಮೋತ್ಸವಕ್ಕೆ ಪರ್ಯಾಯ ರಾಜಕೀಯ ಸಮಾವೇಶ ಮಾಡಲು ಬಿಜೆಪಿಗೆ ಸಾಧ್ಯವಿಲ್ಲ.‌ ಒಂದು ವೇಳೆ ಮಾಡಿದರೂ ಅರ್ಧದಷ್ಟು ಜನ ಸೇರಿಸಲು ಸಾಧ್ಯವೇ ಇಲ್ಲ. ಹಾಗೇನಾದರೂ ಬಿಜೆಪಿ ಸಮಾವೇಶ ಮಾಡುವ ದುಸ್ಸಾಹಸಕ್ಕೆ ಮುಂದಾದರೆ ನಗೆ ಪಾಟಲಿಗೆ ಈಡಾಗುತ್ತಾರೆ ಎಂದುಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ.ಬಿ.ಪಾಟೀಲ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ನಿರೀಕ್ಷೆ ಮೀರಿ ಯಶಸ್ವಿಯಾಗಿದೆ.‌ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಆತ್ಮಸ್ಥೈರ್ಯ ಹೆಚ್ಚಳವಾಗಿದೆ ಎಂದರು.

ಸಿದ್ದರಾಮಯ್ಯನವರ ಅಮೃತ ಮಹೋತ್ಸವದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಆಲಿಂಗನವು ಪಕ್ಷದ ಒಗ್ಗಟ್ಟು ಹೆಚ್ಚಿಸಿದೆ. ಇದರಿಂದ ಬಿಜೆಪಿಯಲ್ಲಿ ತಳಮಳ ಸುರುವಾಗಿದೆ ಎಂದರು.

ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಕರಿ ಬಗ್ಗೆ ಜನರಿಗೆ ಜಿಗುಪ್ಸೆ‌ ಬಂದಿದೆ ಎಂದರು.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 140 ಕ್ಷೇತ್ರಗಳಲ್ಲಿ ಜಯಗಳಿಸುವುದು ನಿಶ್ಚಿತ. ಬಳಿಕ ಶಾಸಕಾಂಗ ಪಕ್ಷದ ಸಭೆ ಮತ್ತು ಹೈಕಮಾಂಡ್, ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರ ನಿರ್ಣಯದ ಮೇರೆಗೆ ‌‌ಮುಖ್ಯಮಂತ್ರಿ ನೇಮಕವಾಗಲಿದೆ ಎಂದು ಹೇಳಿದರು.

***

ಸಿದ್ದರಾಮ್ಯಯ ಜನ್ಮದಿನದಂದುನೂರು ವರ್ಷ ಬಾಳಿ ಎಂದು ಈಶ್ವರಪ್ಪನವರೇ ಶುಭಕೋರಿರುವಾಗ ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್‌ ಆಲಂಗಿಸಿ ಶುಭಕೋರಿರುವುದಕ್ಕೆ ಅಪಾರ್ಥ ಕಲ್ಪಿಸುವುದು ಸರಿಯಲ್ಲ,ಅವರೇನು ವೈರಿಯಲ್ಲ

- ಎಂ.ಬಿ.ಪಾಟೀಲ್, ಅಧ್ಯಕ್ಷ,ಕೆಪಿಸಿಸಿ ಪ್ರಚಾರ ಸಮಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.