ವಿಜಯಪುರ: ಯಶಸ್ಸಿನ ಗುಟ್ಟು ನಿರಂತರ ಓದಿನಲ್ಲಿ ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಭಾನುವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಎಎಸ್, ಐಎಎಸ್ನಂತಹ ಪರೀಕ್ಷೆಗಳ ಪಠ್ಯ ಸಂಗ್ರಹಿಸಿಕೊಂಡು ಹಾಗೂ ಸರಿಯಾಗಿ ಗ್ರಹಿಸಿಕೊಂಡು ಅಭ್ಯಸಿಸಬೇಕು ಎಂದರು.
ಯಾವುದೇ ಕಾರಣಕ್ಕೂ ಪರೀಕ್ಷೆಗಳಿಗೆ ಭಯ ಪಡದೆ, ಓದಿರುವ ವಿಷಯವನ್ನು ಅರ್ಥೈಸಿಕೊಂಡು ಟಿಪ್ಪಣಿ ಮಾಡಿಟ್ಟುಕೊಳ್ಳಬೇಕು. ಪುನಃ ಅದೇ ವಿಷಯದ ಅಧ್ಯಯನ ಮಾಡಿದಾಗ ಈ ಹಿಂದೆ ಓದಿದ ವಿಷಯ ಬಗ್ಗೆ ಮನನವಾಗಲಿದೆ. ಓದಿದ ವಿಷಯವನ್ನು ವಿನಿಮಯ ಮಾಡಿಕೊಂಡಾಗ ವಿಷಯದ ಕುರಿತು ಜ್ಞಾನದ ಹರವು ವಿಸ್ತಾರಗೊಳ್ಳಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಾತನಾಡಿ, ಈ ರೀತಿಯ ಕಾರ್ಯಾಗಾರಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾಗಿ ಸಹಾಯಕವಾಗಿವೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಕಾಲೇಜು, ವಿವಿಧ ವಸತಿ ನಿಲಯಗಳಲ್ಲಿನ ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾತನಾಡಿ, ಜೀವನದಲ್ಲಿ ಸಾಧನೆ ಮಾಡುವ ಛಲದೊಂದಿಗೆ ಅಧ್ಯನಶೀಲತೆ ರೂಢಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಪ್ರತಿನಿತ್ಯ ಅಧ್ಯಯನಕೈಗೊಳ್ಳಬೇಕು. ಆಯ್ಕೆಯ ವಿಷಯ ಕರಗತಗೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಅತ್ಯಂತ ಸಮರ್ಥವಾಗಿ ಎದುರಿಸಬಹುದಾಗಿದೆ ಎಂದರು.
ಸಾಧಕರನ್ನು ಪ್ರೇರಣೆಯಾಗಿಟ್ಟುಕೊಂಡು ನಿರಂತರ ಅಧ್ಯಯನ ಮಾಡಬೇಕು. ವಿಷಯಗಳ ಸಮಗ್ರವಾಗಿ ಅರಿತುಕೊಂಡು ಪರೀಕ್ಷೆಗಳನ್ನು ಎದುರಿಸಲು ಸನ್ನದ್ಧರಾಗಬೇಕು ಎಂದು ಹೇಳಿದರು.
ಕೆಎಎಸ್, ಐಎಎಸ್ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಎಸ್. ಡಿ. ವಿಜಡ್ಂನ ಸಂಸ್ಥಾಪಕ ಅಧ್ಯಕ್ಷ ಶರಣಯ್ಯ ಭಂಡಾರಿಮಠ ಅವರು ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯ ಕುರಿತಾಗಿ ತಿಳಿಸಿಕೊಟ್ಟರು.
ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಶ್ರೀನಾಥ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ್ ಪೋತೆದಾರ, ಉಮೇಶ್ ಲಮಾಣಿ, ಮಂಜು ಹಿರೇಮನಿ, ಅರವಿಂದ ಲಂಬು, ಸದಾನಂದ ಬಡಿಗೇರ, ಮಾದೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.