ADVERTISEMENT

ಚುನಾವಣಾ ಆಯೋಗ ಸಂವಿಧಾನಕ್ಕಿಂತ ದೊಡ್ಡದಲ್ಲ: ಸಚಿವ ಎಂ.ಬಿ. ಪಾಟೀಲ

ಕೇಂದ್ರ ಸರ್ಕಾರದಿಂದ ಆಯೋಗ ದುರುಪಯೋಗ ಎಂದು ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 5:53 IST
Last Updated 17 ನವೆಂಬರ್ 2025, 5:53 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ವಿಜಯಪುರ: ‘ವೋಟ್ ಚೋರಿ, ಮೊದಲಾದ ಗಂಭೀರ ಪ್ರಕರಣಗಳ ಬಗ್ಗೆ ತನಿಖೆ ಮಾಡಲು ಆಸಕ್ತಿ ತೋರದ ಚುನಾವಣಾ ಆಯೋಗದ ನಡವಳಿಕೆಗಳಿಂದ ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮೇಲ್ನೋಟಕ್ಕೆ ಸಾಬೀತಾಗುತ್ತಿದೆ’ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕಾದ ಚುನಾವಣಾ ಆಯೋಗ, ಅವರಿಗೆ ಅಫಿಡವಿಟ್ ಕೇಳಿದೆ. ಸಂವಿಧಾನ ಬದ್ಧವಾಗಿ ಪ್ರತಿಜ್ಞೆ ಸ್ವೀಕರಿಸಿಯೇ ಅವರು ಸಂಸದರಾಗಿದ್ದಾರೆ, ಪ್ರತಿಜ್ಞೆ ಸ್ವೀಕರಿಸಿಯೇ ಲೋಕಸಭೆ ಪ್ರತಿಪಕ್ಷ ನಾಯಕರಾಗಿದ್ದಾರೆ. ಚುನಾವಣಾ ಆಯೋಗ ಸಂವಿಧಾನಕ್ಕಿಂತ ದೊಡ್ಡದಲ್ಲ. ಅಫಿಡವಿಟ್ ಸಲ್ಲಿಸುವ ನಿಯಮಾವಳಿ ಇಲ್ಲ, ಹೀಗಾಗಿ ಸಲ್ಲಿಸಿಲ್ಲ. ಗಂಭೀರವಾದ ಆರೋಪಗಳ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕಿದೆ’ ಎಂದರು.

‘ಬಿಹಾರ್ ಚುನಾವಣೆಯಲ್ಲಿ ಹೀನಾಯ ಸೋಲಿನ ಕಾರಣಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಂಶೋಧನಾ ತಂಡ ಅಧ್ಯಯನ ನಡೆಸುತ್ತಿದೆ. ಚುನಾವಣಾ ಪೂರ್ವದಲ್ಲಿಯೇ ಸರ್ಕಾರಿ ಹಣವನ್ನೇ ಜನರ ಖಾತೆಗೆ ಜಮಾ ಮಾಡಿದ್ದು ಸಹ ಸೋಲಿಗೆ ಕಾರಣ ಎಂದು ವಿಶ್ಲೇಷಿಸಬಹುದು’ ಎಂದು ಹೇಳಿದರು.

ADVERTISEMENT

‘ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ವಿಶೇಷವಾಗಿ ಕಬ್ಬು ಬೆಳೆಗಾರರ ಬಗ್ಗೆ ಚರ್ಚಿಸಲಿದ್ದಾರೆ. ಕೇಂದ್ರ ರೂಪಿಸಿರುವ ಎಫ್‌ಆರ್‌ಪಿ ದರದಿಂದ ರೈತರಿಗೆ ಅನ್ಯಾಯವಾಗುತ್ತದೆ. ಕಬ್ಬು ಕಟಾವು, ಸಾಗಣೆ ವೆಚ್ಚ ಸೇರಿ ₹3,500 ನಿಗದಿ ಮಾಡಿರುವುದರಿಂದ ರೈತರಿಗೆ ತೊಂದರೆಯಾಗುತ್ತದೆ. ಇದರ ಪರಿಷ್ಕರಣೆ, ಮೊದಲಾದ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ’ ಎಂದು ತಿಳಿಸಿದರು.

‘ನವೆಂಬರ್ ಡಿಸೆಂಬರ್ ಕ್ರಾಂತಿ ಯಾವುದೂ ಗೊತ್ತಿಲ್ಲ’

‘ನವೆಂಬರ್ ಕ್ರಾಂತಿಯೋ ಡಿಸೆಂಬರ್ ಕ್ರಾಂತಿಯೋ ಯಾವುದೂ ನಮಗೆ ಗೊತ್ತಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಾನು ಸೇರಿದಂತೆ ಎಲ್ಲರೂ ಪಕ್ಷದ ಕಾರ್ಯಕರ್ತರು. ಸಚಿವ ಸಂಪುಟ ವಿಸ್ತರಣೆ ಪುನರ್ ರಚನೆ ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಷಯ. ಈ ಬಗ್ಗೆ ನನಗೆ ಗೊತ್ತಿಲ್ಲ. ಸಲೀಂ ಅಹ್ಮದ್ ಸೇರಿದಂತೆ ಎಲ್ಲರೂ ಸಚಿವರಾಗಲು ಅರ್ಹರು. ಅವರೂ ಪಕ್ಷಕ್ಕೆ ದುಡಿದಿದ್ದಾರೆ. ಸಚಿವ ಸ್ಥಾನ ಅಪೇಕ್ಷಿಸುವುದರಲ್ಲಿ ತಪ್ಪಿಲ್ಲ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.