ADVERTISEMENT

ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ನಿವಾರಿಸಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 6:37 IST
Last Updated 9 ಸೆಪ್ಟೆಂಬರ್ 2025, 6:37 IST
ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ನಿವಾರಿಸಲು ಆಗ್ರಹಿಸಿ ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಎಐಡಿಎಸ್ಒ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಸೋಮವಾರ ಮನವಿ ಸಲ್ಲಿಸಿದರು
ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ನಿವಾರಿಸಲು ಆಗ್ರಹಿಸಿ ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಎಐಡಿಎಸ್ಒ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಸೋಮವಾರ ಮನವಿ ಸಲ್ಲಿಸಿದರು   

ವಿಜಯಪುರ: ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ನಿವಾರಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟಿಸಿದರು.

ಎಐಡಿಎಸ್‍ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ‘ರಾಜ್ಯದಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ’ ಎಂದು ಹೇಳಿದರು.

‘ಸರ್ಕಾರದ ವಿಳಂಬ ನೀತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ’ ಎಂದು ಹೇಳಿದರು.

ADVERTISEMENT

‘ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕು’ ಎಂದು  ಆಗ್ರಹಿಸಿದರು.

ಶಂಕರ ಕಾಂಬಳೆ, ಕಿರಣ ರಾಠೋಡ, ಸೊಹೆಲ್, ಮೊಹಮದ್ ಜುಬೇರ್, ಸಿದ್ರಾಮ ಜೋಗಿ, ಮೊಹಮದ್ ಬಾಗವಾನ, ಖಾದೀರ್ ಮಾಶ್ಯಾಳ, ವಿಶ್ವ ಉಕ್ಕಲಿ, ಗೋಪಾಲ ಹಾದಿಮನಿ, ಗಣೇಶ ಡೆಗಿನಾಳ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.