ADVERTISEMENT

ಪಂಚ ಗ್ಯಾರಂಟಿ: ಅರ್ಹರು ಹೊರಗುಳಿಯದಿರಲಿ

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 14:30 IST
Last Updated 21 ಜೂನ್ 2025, 14:30 IST
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಇದ್ದಾರೆ
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಇದ್ದಾರೆ   

ವಿಜಯಪುರ: ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಟಾನಗೊಳಿಸುವ ಮೂಲಕ ಯಾವುದೇ ಅರ್ಹಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಡವರ ಪಾಲಿನ ಅಕ್ಕಿ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿಯೇ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಜನರಿಗೆ ಅನುಕೂಲ ಕಲ್ಪಿಸಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಎಂದರು.

ADVERTISEMENT

ಜಿಲ್ಲೆಯಲ್ಲಿ ಈವರೆಗೆ ಪಂಚ ಗ್ಯಾರಂಟಿ ಯೋಜನೆಯಡಿ ₹ 3177 ಕೋಟಿ ವೆಚ್ಚ ಮಾಡಲಾಗಿದೆ. ಈ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು ಎಂದು ಹೇಳಿದರು.

ಗೃಹ ಜ್ಯೊತಿ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ.  ಈ ಯೋಜನೆಯಿಂದ ಯಾವುದೇ ಫಲಾನುಭವಿ ವಂಚಿತರಾಗದಂತೆ  ಫಲಾನುಭವಿಗಳನ್ನು ಗುರುತಿಸಿ, ಮಾಹಿತಿ ಒದಗಿಸಿ ಯೋಜನೆಯ ಲಾಭ ದೊರಕಿಸಬೇಕು ಎಂದರು.

ಗೃಹ ಲಕ್ಷ್ಮೀ ಯೋಜನೆಯಡಿ ಪಡೆದ ಹಣದಿಂದ ತಮ್ಮ ಬದುಕಿನಲ್ಲಿ ಆದ ಬದಲಾವಣೆಗಳ ಕುರಿತ ಫಲಾನುಭವಿಗಳ ಯಶೋಗಾಥೆ ಪ್ರಕಟಿಸುವ ಮೂಲಕ ಯೋಜನೆಗಳ ಮಾಹಿತಿ ಪ್ರತಿಯೊಬ್ಬರಿಗೂ ತಲುಪಿಸಲು ವ್ಯಾಪಕವಾಗಿ ಪ್ರಚಾರ ಕೈಗೊಳ್ಳುವಂತೆ ಅವರು ಸೂಚಿಸಿದರು.

ಶಕ್ತಿ ಯೋಜನೆಯಡಿ ಮೇ ಅಂತ್ಯದವರೆಗೆ 13.18 ಕೋಟಿ ಮಹಿಳೆಯರು ಪ್ರಯಾಣ ಬೆಳೆಸಿದ್ದು, ಒಟ್ಟು ₹ 426 ಕೋಟಿ  ವೆಚ್ಚ ಮಾಡಲಾಗಿದೆ. ಪ್ರತಿ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಮಹಿಳೆಯರಿಗೆ ವಿಶ್ರಾಂತಿ ಕೊಠಡಿಗಳ ಸೌಲಭ್ಯ ಸೇರಿದಂತೆ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಅವರು ತಿಳಿಸಿದರು. 

ಯುವ ನಿಧಿ ಯೋಜನೆಯಿಂದ ಹಲವು ನಿರುದ್ಯೋಗಿಗಳಿಗೆ ಸಹಕಾರಿಯಾಗಿದೆ. ಯುವಕರಿಗೆ ತರಬೇತಿ ಮತ್ತು ಉದ್ಯೋಗ ಮೇಳಗಳನ್ನು ಆಯೋಜಿಸಬೇಕು.ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ತೋರುವಂತೆ ಕ್ರಮವಹಿಸಬೇಕು ಎಂದು ಅವರು ಹೇಳಿದರು. 

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ಉಪಾಧ್ಯಕ್ಷ ಹೊನ್ನಮಲ್ಲ ಸಾರವಾಡ, ಸುಂದರಪಾಲ ರಾಠೋಡ, ನಬಿಲಾಲ ನಾಯ್ಕೋಡಿ, ಆನಂದ ಜಾಧವ, ಮಹಾದೇವಿ ಗೋಕಾಕ, ಸದ್ಯರಾದ ಆರತಿ ನಾವಿ, ಸಾಹೇಬಗೌಡ ಬಿರಾದಾರ, ಮಲ್ಲಪ್ಪ ದಳವಾಯಿ, ಗುರುಪಾದಗೌಡ ದಾಶ್ಯಾಳ, ಶ್ರೀಶೈಲ ಕವಲಗಿ, ರವಿದಾಸ ಜಾಧವ, ಮೈಬೂಬಸಾಬ ನಾಯ್ಕೊಡಿ, ಸಂತೋಷ ಗಣಾಚಾರಿ, ಶಂಕರಗೌಡ ಹಿರೇಗೌಡರ, ಚಂದ್ರಶೇಖರ ಹಳೆಮನಿ, ರಾಜಶೇಖರ ಅವಜಿ, ಪ್ರಶಾಂತ ಕಾಳೆ, ಸಂಗನಗೌಡ ದೇಸಾಯಿ, ಶರಣಬಸಪ್ಪ ಚೌರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.