ADVERTISEMENT

30ರಂದು ‘ಗಡಿನಾಡ ಚೇತನ’ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2024, 16:18 IST
Last Updated 27 ಸೆಪ್ಟೆಂಬರ್ 2024, 16:18 IST
ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಕಾಸರಗೋಡು
ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಕಾಸರಗೋಡು    

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ 2023-24 ಹಾಗೂ 2024-25ನೇ ಸಾಲಿನ ‘ಗಡಿನಾಡ ಚೇತನ’ ಪ್ರಶಸ್ತಿಗೆ ಮೂವರು ಮಹನೀಯರು ಮತ್ತು ನಾಲ್ಕು ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.

2023-24ನೇ ಸಾಲಿನ ಡಾ. ಚನ್ನಬಸವ ಪಟ್ಟದ್ದೇವರು ಹೆಸರಿನ ‘ಗಡಿನಾಡಿನ ಚೇತನ’ ಪ್ರಶಸ್ತಿಗೆ ಕಾಸರಗೋಡಿನ ರಾಧಾಕೃಷ್ಣ ಕೆ. ಉಳಿಯತ್ತಡ, ಡಾ. ಜಯದೇವಿ ತಾಯಿ ಲಿಗಾಡೆ ‘ಗಡಿನಾಡ ಚೇತನ’ ಪ್ರಶಸ್ತಿಗೆ ಬೀದರಿನ ಪಂಚಾಕ್ಷರಿ ಪುಣ್ಯಶೆಟ್ಟಿ ಹಾಗೂ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿಯ ಬಿ.ಎಸ್. ಗವಿಮಠ ಆಯ್ಕೆಯಾಗಿದ್ದಾರೆ.

2024-25ನೇ ಸಾಲಿನ ಡಾ. ಚನ್ನಬಸವ ಪಟ್ಟದ್ದೇವರು ‘ಗಡಿನಾಡ ಚೇತನ’ ಪ್ರಶಸ್ತಿಗೆ ಗುಜರಾತ್‌ನ ಅಹಮದಾಬಾದ್‌ ಕರ್ನಾಟಕ ಸಂಘ, ಜಯದೇವಿ ತಾಯಿ ಲಿಗಾಡೆ ‘ಗಡಿನಾಡ ಚೇತನ’ ಪ್ರಶಸ್ತಿಗೆ ಮಹಾರಾಷ್ಟ್ರ ರಾಜ್ಯದ ಸಂಖದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಉಮದಿಯ ಸರ್ವೋದಯ ಶಿಕ್ಷಣ ಸಂಸ್ಥೆ ಮತ್ತು ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ‘ಗಡಿನಾಡ ಚೇತನ’ ಪ್ರಶಸ್ತಿಗೆ ಕಾಸರಗೋಡಿನ ಪೆರಡಾಲ ನೀರ್ಚಾಲು, ಕುಂಬಳೆ (ದಾರಿ) ಮಹಾಜನ ವಿದ್ಯಾಭಿವರ್ಧಕ ಸಂಘವನ್ನು ಆಯ್ಕೆ ಮಾಡಲಾಗಿದೆ‌ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದರು.

ADVERTISEMENT

‘ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಸಮಿತಿ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ಹಲ್ಮಿಡಿ ಶಾಸನದ ಮಾದರಿಯ ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ತಲಾ ₹1 ಲಕ್ಷ ನಗದು ಒಳಗೊಂಡಿದೆ. ಮಹಾರಾಷ್ಟ್ರ ರಾಜ್ಯದ ಜತ್ತ ತಾಲ್ಲೂಕಿನ ಗುಡ್ಡಾಪುರದ ಶ್ರೀದಾನಮ್ಮದೇವಿ ಸುಕ್ಷೇತ್ರದಲ್ಲಿ ಸೆಪ್ಟೆಂಬರ್ 30 ರಂದು ನಡೆಯುವ ‘ಕರ್ನಾಟಕ ಸಂಭ್ರಮ-50’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.