ADVERTISEMENT

ಬಲಗೈ ಸಮಾಜಕ್ಕೆ ಸಚಿವ ಸ್ಥಾನ ನೀಡಿ

ವಿಜಯಪುರ ಜಿಲ್ಲಾ ಛಲವಾದಿ ಮಹಾಸಭಾ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 13:54 IST
Last Updated 10 ಆಗಸ್ಟ್ 2021, 13:54 IST
ಚಂದ್ರಶೇಖರ ಕೊಡಬಾಗಿ
ಚಂದ್ರಶೇಖರ ಕೊಡಬಾಗಿ   

ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ವಿಜಯಪುರ ಜಿಲ್ಲಾ ಛಲವಾದಿ ಮಹಾಸಭಾ ಆಗ್ರಹಿಸಿದೆ.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಕೊಡಬಾಗಿ, ಛಲವಾದಿ ಸಮಾಜಕ್ಕೆ ಸೇರಿದ ನೆಹರೂ ವಾಲಿಕಾರ ಅಥವಾ ಎಂ.ಪಿ. ಕುಮಾರಸ್ವಾಮಿ ಅವರನ್ನು ಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಬಲಗೈ ಸಮಾಜದವರು ಸುಮಾರು 60ರಿಂದ 70 ಲಕ್ಷ ಜನರಿದ್ದೇವೆ. ಈ ಸಮಾಜವು ಬಿಜೆಪಿಯನ್ನು ಬೆಂಬಲಿಸಿದೆ. ಮಂತ್ರಿ ಸ್ಥಾನ ನೀಡದಿದ್ದರೇ ಸಮಾಜ ಮುಂಬರುವ ದಿನದಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಈ ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿದ್ಯ ನೀಡದೇ ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಜಿಲ್ಲೆಗೂ ಪ್ರಾತಿನಿಧ್ಯ ನೀಡಿ:

ರಾಜ್ಯ ಸರ್ಕಾರದಲ್ಲಿ ವಿಜಯಪುರ ಜಿಲ್ಲೆಯ ಬಿಜೆಪಿಯ ಯಾವೊಬ್ಬ ಶಾಸಕರಿಗೂ ಸಚಿವ ಸ್ಥಾನ ನೀಡದೇ ತಾರತಮ್ಯ ಮಾಡಲಾಗಿರುವುದು ಖಂಡನೀಯ. ಜಿಲ್ಲೆಯ ನಾಲ್ವರು ಬಿಜೆಪಿ ಶಾಸಕರ ಪೈಕಿ ಯಾರಿಗಾದರೊಬ್ಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಹಿರಿಯಶಾಸಕ ಬಸನಗೌಡ ಪಾಟೀಲ ಯತ್ನಾಳ, ಎ.ಎಸ್‌.ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ ಮತ್ತು ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪೂರ ಅವರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಗೆ ಆಗಿರುವ ತಾರತಮ್ಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ವಿಜಯಪುರ ಹಿಂದುಳಿದ ಜಿಲ್ಲೆಯಾಗಿದೆ. ಇಲ್ಲಿಗೆ ಬೇರೆ ಜಿಲ್ಲೆಯವರನ್ನು ಸಚಿವರನ್ನಾಗಿ ಮಾಡುವ ಬದಲು ಇದೇ ಜಿಲ್ಲೆಯವರನ್ನು ಸಚಿವರನ್ನಾಗಿ ಮಾಡಿದೆ. ಒಂದಷ್ಟು ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಸುನೀಲ ಎಂ.ಉಕ್ಕಲಿ, ಮುಖಂಡರಾದ ಸುರೇಶ ಗೊಣಸಗಿ, ಅಡಿವೆಪ್ಪ ಸಾಲಗಲ್ಲ, ಸಂಗಪ್ಪ ಛಲವಾದಿ, ರಾಹುಲ ಕುಬಕಡ್ಡಿ, ಮಹೇಶ ಕ್ಯಾತನ, ದಾದಾಸಾಹೇಬ ಭಾಗಾಯತ್‌ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.