ವಿಜಯಪುರ: ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವವು ಜ.10ರ ಮಧ್ಯಾಹ್ನ 3ಕ್ಕೆ ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಸಂಸ್ಥೆ ಅಧ್ಯಕ್ಷ ಎಸ್.ಎ.ಪುಣೇಕರ ಹೇಳಿದರು.
ಸಾಧನೆ ಮಾಡಬೇಕೆಂಬ ಉದ್ದೇಶದಿಂದ ಎಂಜಿನಿಯರಿಂಗ್ ವೃತ್ತಿ ಬಿಟ್ಟು 1969ರಲ್ಲಿ ಆರಂಭಿಸಿದ ಶಿಕ್ಷಣ ಸಂಸ್ಥೆ, ಇದೀಗ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಂಸ್ಥೆಯಡಿಯಲ್ಲಿ 24ಕ್ಕಿಂತ ಹೆಚ್ಚು ವಿದ್ಯಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿವರೆಗೆ ಶಿಕ್ಷಣ ಕಲ್ಪಿಸಲಾಗುತ್ತಿದೆ. 50 ವರ್ಷಗಳಲ್ಲಿ ಲಕ್ಷಾಂತರ ಮಕ್ಕಳಿಗೆ ಬೆಳಕು ನೀಡಿರುವ ಸಂಸ್ಥೆಯಲ್ಲಿ ಪ್ರಸ್ತುತ 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಸಾವಿರಕ್ಕೂ ಅಧಿಕ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಸೈನಿಕ ಶಾಲೆಯಲ್ಲಿ ಮಾತ್ರ ಇಂಗ್ಲಿಷ್ ಮಾಧ್ಯಮ ಶಿಕ್ಷಣ ದೊರೆಯುತ್ತಿದ್ದ ಕಾಲದಲ್ಲಿ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ, ಮಹಿಳಾ ಪದವಿ ಪೂರ್ವ ಕಾಲೇಜು ಸಂಸ್ಥೆ ಆರಂಭಿಸಿ, ಕಡಿಮೆ ಶುಲ್ಕದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಅನುವು ಮಾಡಿಕೊಟ್ಟ ಹಿರಿಮೆ ನಮ್ಮ ಸಂಸ್ಥೆಯದ್ದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಬದಲಾವಣೆ ತರಲು ಯೋಚನೆಯಿದೆ ಎಂದರು.
ಸಂಸ್ಥೆ ಕಾರ್ಯದರ್ಶಿ ಎ.ಎಸ್.ಪಾಟೀಲ, ನಿರ್ದೇಶಕರಾದ ಜಿಯಾಬೆದಿನ್ ಪುಣೇಕರ, ಸಲಾವುದ್ದೀನ್ ಪುಣೇಕರ, ಅನ್ವರ್ ಪುಣೇಕರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.