ADVERTISEMENT

ಯಶಸ್ಸು ಸಾಧಕನ ಸ್ವತ್ತು; ಜಿಗಜಿಣಗಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 12:46 IST
Last Updated 21 ಡಿಸೆಂಬರ್ 2019, 12:46 IST
ವಿಜಯಪುರದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನೌಕರರೊಬ್ಬರು ಗುಂಡು ಎಸೆದರು
ವಿಜಯಪುರದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನೌಕರರೊಬ್ಬರು ಗುಂಡು ಎಸೆದರು   

ವಿಜಯಪುರ: ‘ಸೋಲು ಗೆಲುವು ಜೀವನದ ಅವಿಭಾಜ್ಯ ಅಂಗಗಳು. ಶ್ರದ್ಧೆ ಮತ್ತು ನಿಷ್ಠೆಯಿಂದ ಪ್ರಯತ್ನಿಸಿದಾಗ ಯಶಸ್ಸು ಖಚಿತ’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ನಗರದಲ್ಲಿ ಶುಕ್ರವಾರ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕ್ರೀಡಾ ಆಸಕ್ತಿಯಿಂದ ಭಾಗವಹಿಸಬೇಕು. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು. ವಿಜೇತರು ಬೀಗದೆ, ಸೋತವರು ಕುಗ್ಗದೆ, ಸೋಲನ್ನು ಸವಾಲಾಗಿ ಸ್ವೀಕರಿಸಬೇಕು’ ಎಂದರು.

‘ಅನೇಕ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ವಿಜೇತರಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಉದ್ಯೋಗದಲ್ಲಿದ್ದಾರೆ. ಇದು ಹೆಮ್ಮೆಯ ವಿಷಯ. ಇಂದು ನೌಕರರ ವರ್ಗದಲ್ಲಿ ಸಾಕಷ್ಟು ಒತ್ತಡಗಳಿವೆ. ಒತ್ತಡಗಳ ಮಧ್ಯೆಯೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಶಾಸಕ ಅರುಣ ಶಹಾಪುರ ಮಾತನಾಡಿ, ‘ತಾಂತ್ರಿಕತೆ ಹಾಗೂ ಸಿಬ್ಬಂದಿ ಕೊರತೆಯಿಂದ ದಿನ ನಿತ್ಯದ ಕೆಲಸ ಕಾರ್ಯಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ಮನೋಬಲ ಹಾಗೂ ನೌಕರರ ಸಂಬಂಧಗಳು ಹೆಚ್ಚುತ್ತವೆ’ ಎಂದು ಹೇಳಿದರು.

ರಾಷ್ಟ್ರ ಯುವ ಪ್ರಶಸ್ತಿ ವಿಜೇತ ಡಾ.ಜಾವಿದ್ ಜಮಾದಾರ ಮಾತನಾಡಿ, ‘ನೌಕರರು ಕ್ರೀಡೆಗೆ ಹೆಚ್ಚು ಒತ್ತು ನೀಡಬೇಕು. ಕ್ರೀಡಾಪಟುಗಳಿಗೆ ಅವಶ್ಯಕ ಕ್ರೀಡಾ ಸಾಮಗ್ರಿಗಳನ್ನು ಒದಗಿಸಬೇಕು. ಇದರಿಂದ ನೌಕರರು ಕ್ರೀಡೆಗಳ ಕಡೆಗೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತದೆ’ ಎಂದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಶೇಡಾಶ್ಯಾಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಸಲಹಾ ಸಮಿತಿ ಸದಸ್ಯ ಅಡಿವೆಪ್ಪ ಸಾಲಗಲ್ಲ ಮಾತನಾಡಿದರು.

ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ.ನದಾಫ್, ವಕೀಲ ನಾಗರಜ ಪಿ.ಲಂಬು, ಸಂಘದ ಖಜಾಂಚಿ ಜುಬೇರ ಕೆರೂರ, ಶಿವಾನಂದ ಮಂಗಾನವರ, ವಿಜಯಕುಮಾರ ಹತ್ತಿ, ರಾಜಶೇಖರ ದೈವಾಡಿ, ಗಂಗಾಧರ ಜೀವೂರ, ಸುರೇಶ ಅಂಬಿಗೇರ, ಶಿವರಾಜಕುಮಾರ ಬಿರಾದಾರ ಇದ್ದರು.

ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ ಸ್ವಾಗತಿಸಿದರು. ವಿ.ಡಿ.ಬೆಳ್ಳನ್ನವರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.