ಗೃಹಲಕ್ಷ್ಮಿ ಯೋಜನೆ (ಸಾಂದರ್ಭಿಕ ಚಿತ್ರ)
ವಿಜಯಪುರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ನಿವಾರಣೆಗೆ ಡಿ.27 ರಿಂದ 29ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ.
ಬ್ಯಾಂಕ್ ಖಾತೆಗಳ ಸಂಬಂಧಿಸಿದ ಸಮಸ್ಯೆ, ಆಧಾರ್ ಜೋಡಣೆ ಸಮಸ್ಯೆ, ಇ-ಕೆವೈಸಿ ಅಪ್ಡೆಟ್, ಹೊಸ ಬ್ಯಾಂಕ್ ಖಾತೆ ಆರಂಭ, ಎನ್ಪಿಸಿಐ ಸಮಸ್ಯೆ ಸೇರಿದಂತೆ ವಿವಿಧ ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ 211 ಗ್ರಾ.ಪಂಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಗೃಹಲಕ್ಷ್ಮಿ ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಲು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 17,149 ಗೃಹಲಕ್ಷ್ಮಿ ಫಲಾನುಭವಿಗಳ ತಾಂತ್ರಿಕ ಸಮಸ್ಯೆ ಕಂಡುಬಂದಿದೆ. ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳಿಗೆ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಲಾಗುವುದು. ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡಲಾಗುವುದು. ಇ-ಕೆವೈಸಿ ಅಪ್ಡೆಟ್ ಮಾಡಲಾಗುವುದು. ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲಿಸಲಾಗುವುದು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಡಿ.27ರಿಂದ ಡಿ.29ರವರೆಗೆ ವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳ ಕಾರ್ಯಾಲಯದಲ್ಲಿ ಆಯಾ ಪಂಚಾಯಿತಿ ಪಿಡಿಓಗಳ ನೇತೃತ್ವದಲ್ಲಿ ಕ್ಯಾಂಪ್ಗಳನ್ನು ಆಯೋಜಿಸಲಾಗಿದೆ. ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಗೃಹಲಕ್ಷ್ಮಿ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.