ವಿಜಯಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಸುಗ್ರೀವಾಜ್ಞೆಗಳು ಮತ್ತು ರೂಪಿಸಿರುವ ಮಸೂದೆಗಳು ರೈತರು ಮತ್ತು ಕಾರ್ಮಿಕರ ವಿರೋಧಿಯಾಗಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ ತಡೆ ನಡೆಸಿದ ರೈತರು, ಹಲಗೆ ಬಾರಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಭೂ ಸುಧಾರಣಾ ತಿದ್ದುಪಡೆ ಕಾಯ್ದೆ, ಎ.ಪಿ.ಎಂ.ಸಿ. ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಿದರು. ಜೊತೆಗೆ ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸುತ್ತಿರುವುದನ್ನು ಖಂಡಿಸಿದರು.
ರೈತ, ಕಾರ್ಮಿಕ ವಿರೋಧಿ ಮಸೂದೆಗಳನ್ನು ಸರ್ಕಾರಗಳು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವಹೊಸ ವಿಧೇಯಕಗಳು ರೈತರು ಮತ್ತು ವಾಣಿಜ್ಯೋದ್ಯಮಿಗಳಿಗೆ ಮಾರಕವಾಗಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ, ಕಾರ್ಪೊರೇಟ್ ಕಂಪನಿಗಳಿಗೆ ಉತ್ತೇಜನಕಾರಿಯಾಗಿದೆ. ಈ ಕಂಪನಿಗಳ ಹಿಡಿತಕ್ಕೆ ರೈತಾಪಿ ಜನರು ಒಳಗಾಗುತ್ತಾರೆ ಎಂದು ಆರೋಪಿಸಿದರು.
ಪ್ರಜಾತಾಂತ್ರಿಕ ಚರ್ಚೆಗಳಿಗೆ ಕಿಂಚಿತ್ತೂ ಬೆಲೆ ನೀಡದೆ, ಎಲ್ಲ ಪ್ರಜಾತಾಂತ್ರಿಕ ಪ್ರಕ್ರಿಯೆಗಳನ್ನು ಗಾಳಿಗೆ ತೂರಿ ಕೋವಿಡ್ ಸಂದರ್ಭವನ್ನು ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತರಾತುರಿಯಲ್ಲಿ ಈ ಕಾಯ್ದೆಗಳನ್ನು ಅಂಗೀಕರಿಸುತ್ತಿರುವ ಕುತಂತ್ರವು ಬಯಲಾಗಿದೆ ಎಂದು ದೂರಿದರು.
‘ಕರ್ನಾಟಕ ಬಂದ್’ಗೆ ಬೆಂಬಲ
ವಿಜಯಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಂಗೀಕರಿಸಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ, ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ, ಗುತ್ತಿಗೆ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಅಖಿಲ ಭಾರತ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್ಸಿಸಿ)ಯು ಸೆ.28ರಂದು ನಡೆಸಲು ಉದ್ದೇಶಿಸಿರುವ ಕರ್ನಾಟಕ ಬಂದ್ಗೆ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ, ವಿಜಯಪುರ ಮರ್ಚಂಟ್ಸ್ ಅಸೋಸಿಯೇಶನ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.