ವಿಜಯಪುರ: ಜನಸಂಖ್ಯೆ ದೇಶದ ಅಭಿವೃದ್ಧಿಗೆ ಒಂದು ಅತ್ಯಮೂಲ್ಯ ಸಂಪನ್ಮೂಲ. ಆದರೆ, ಜನಸಂಖ್ಯೆ ಮೀತಿ ಮೀರಿದರೆ ದೇಶದ ಅಭಿವೃದ್ಧಿಗೆ ಮಾರಕ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತುಳಜಾ ಭವಾನಿ ನರ್ಸಿಂಗ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಇಂದು ಜಗತ್ತಿನ ಜನಸಂಖ್ಯೆ 7.9 ಶತಕೋಟಿ ಇದೆ. 2025ಕ್ಕೆ 800 ಶತಕೋಟಿ ದಾಡುವ ಸಾಧ್ಯತೆ ಇದೆ. ದೇಶದಲ್ಲಿ ಪ್ರತಿ ವರ್ಷ 1.55 ಕೋಟಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಪ್ರತಿ ವರ್ಷ 7.75 ಲಕ್ಷದಷ್ಟು ಜನಸಂಖ್ಯೆ ಹೆಚ್ಚವರಿಯಾಗುತ್ತಿದೆ. ಈ ವೇಗದಲ್ಲಿ ಜನಸಂಖ್ಯೆಯು ಬೆಳೆಯುತ್ತಿದ್ದರೆ ಭಾರತವು ಮುಂದಿನ 35 ವರ್ಷಗಳಲ್ಲಿ 200 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಲಿದೆ ಎಂದರು.
ಈ ವರ್ಷ ‘ಆರೋಗ್ಯಕರ ಸಮಯ ಮತ್ತು ಯೋಜಿತ ಪೋಷಕತ್ವಕ್ಕಾಗಿ ಗರ್ಭಧಾರಣೆ ನಡುವೆ ಅಂತರವಿರಲಿ’ ಎಂಬ ಘೋಷವಾಕ್ಯದಡಿ ಜನಸಂಖ್ಯಾ ದಿನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ವರಿ ಗೊಲಗೇರಿ ಮಾತನಾಡಿ, ಜನನ ನಿಯಂತ್ರಣ ಯೋಜನೆಗಳ ಮೂಲಕ ಸಾಕಷ್ಟು ಜನನಗಳನ್ನು ತಡೆಗಟ್ಟಲಾಗಿದೆ. ಆದರೂ ಬಡತನ, ಅಜ್ಞಾನ, ಮಾಹಿತಿ ಕೊರತೆ, ಮೂಢನಂಬಿಕೆ, ಲಿಂಗ ಅಸಮಾನತೆ ಮುಂತಾದ ಕಾರಣಗಳಿಂದಾಗಿ ಜನಸಂಖ್ಯೆಯು ಇನ್ನೂ ಹೆಚ್ಚುತ್ತಲೇ ಇದೆ ಎಂದು ಹೇಳಿದರು.
ಸಾಂಕ್ರಾಮಿಕ ರೋಗಗಳ ತಜ್ಞ ವೈದ್ಯ ಡಾ.ಶ್ರೀನಿವಾಸ ಎಸ್ ಆರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅಪ್ಪಾಸಾಹೇಬ ಇನಾಮದಾರ, ಪ್ರಭಾರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಕೆ.ಡಿ. ಗುಂಡಬಾವಡಿ, ತುಳಜಾ ಭವಾನಿ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಪ್ರೊ.ಸಚಿನ್ ಕಿರಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ. ಎಂ. ಕೊಲೂರ, ಸುರೇಶ ಹೊಸಮನಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ದಶವಂತ, ಮೇಲ್ವಿಚಾರಣಾಧಿಕಾರಿ ಮೋತಿಲಾಲ ಲಮಾಣಿ, ಕುಮಾರ ರಾಠೋ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್. ಬಾಗವಾನ ಕಾರ್ಯಕ್ರಮದಲ್ಲಿ ಇದ್ದರು.
ಸುಧಾರಿಸಿದ ಆರೋಗ್ಯ ಸೇವಾ ಸೌಲಭ್ಯಗಳಿಂದಾಗಿ ಸಾಂಕ್ರಾಮಿಕ ರೋಗಗಳು ನಿಯಂತ್ರಣದಲ್ಲಿವೆ ಪರಿಣಾಮ ಮರಣ ಪ್ರಮಾಣ ಕಡಿಮೆಯಾಗಿದ್ದು ಜನಸಂಖ್ಯೆ ಹೆಚ್ಚಳವಾಗುತ್ತಿದೆಡಾ.ಸಂಪತ್ ಗುಣಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.