ಮುದ್ದೇಬಿಹಾಳ: ತಾಲ್ಲೂಕಿನ ತಂಗಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮರಗೋಳ ಗ್ರಾಮದಲ್ಲಿರುವ ಕೃಷ್ಣಾ ನದಿ ತೀರದಲ್ಲಿ ಕಪ್ಪು ಮಣ್ಣನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ದೂರು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಾಯುಕ್ತ ಇನ್ಸ್ಪೆಕ್ಟರ್ ಆನಂದ ಠಕ್ಕನ್ನವರ, ‘ಸ್ಥಳದಲ್ಲಿ ಒಂದು ಹಿಟಾಚಿ, ಎರಡು ಟಿಪ್ಪರ್ ಕಂಡು ಬಂದಿವೆ. 400ಕ್ಕೂ ಹೆಚ್ಚು ಟಿಪ್ಪರ್ನಷ್ಟು ಮಣ್ಣನ್ನು ಸಾಗಿಸಲಾಗಿದೆ. ಆದರೆ, ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಪಡೆದಿಲ್ಲವೆಂಬುದು ಅಲ್ಲಿದ್ದವರನ್ನು ವಿಚಾರಿಸಿದಾಗ ತಿಳಿದು ಬಂದಿದೆ. ಈ ಕುರಿತು ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ’ ಎಂದು ಹೇಳಿದರು.
‘ತಾಲ್ಲೂಕು ಆಡಳಿತ, ಕೆಬಿಜೆಎನ್ಎಲ್ ಹಾಗೂ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದವರಿಗೆ ನೋಟಿಸ್ ನೀಡುವ ವಿಚಾರದ ಕುರಿತು ಮೇಲಧಿಕಾರಿಗಳು ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ತಿಳಿಸಿದರು.
‘ತಂಗಡಗಿ ಗ್ರಾಮದ ನೀರು ಶುದ್ಧೀಕರಣ ಘಟಕದಲ್ಲಿ ಪಾಚಿ ತುಂಬಿದ್ದು, ಶುಚಿಗೊಳಿಸಿಲ್ಲ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಶುದ್ಧ ನೀರು ಪೂರೈಸುವಂತೆ ತಿಳಿಸಲಾಗಿದೆ’ ಎಂದರು.
ದೂರುದಾರ ಸಂಗಯ್ಯ ಸಾರಂಗಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.