ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿನ ಮತದಾರರ ಪಟ್ಟಿಯಲ್ಲಿನ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ.ಬಿಜೆಪಿ ಶಾಸಕರು ತಮ್ಮ ಸೌಹಾರ್ದ ಬ್ಯಾಂಕಿನ ಸಿಬ್ಬಂದಿ ಬಳಸಿಕೊಂಡು ಅಕ್ರಮ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಆರೋಪಿಸಿದ್ದಾರೆ.
ಸಿದ್ಧಸಿರಿ ಸೌಹಾರ್ದ ಸಿಬ್ಬಂದಿ ಮಹಂತೇಶ್ ಪೂಜಾರಿ ಎಂಬುವವರು ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹಿಸುವಾಗ ಸಿಕ್ಕಿಬಿದ್ದಿದ್ದಾರೆ. ಸರ್ಕಾರಿ ಅಧಿಕಾರಿಯೂ ಅಲ್ಲ, ಬಿಎಲ್ಒ ಅಲ್ಲ. ಯಾವ ಪಕ್ಷದ ಕಾರ್ಯಕರ್ತನೂ ಅಲ್ಲ. ಆ ವ್ಯಕ್ತಿಯ ಹೇಳಿಕೆ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಂಶಯಾಸ್ಪದ ವ್ಯಕ್ತಿಯನ್ನು ವಿಚಾರಣೆ ಮಾಡಿ, ಎಲ್ಲ ಸತ್ಯಗಳನ್ನು ಬಾಯಿಬಿಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಾವಿರಾರು ಮತದಾರರು ತಮ್ಮ ಸಂವಿಧಾನ ಬದ್ಧ ಹಕ್ಕಿನಿಂದ ವಂಚಿತರಾಗಿದ್ದಾರೆ. ನಗರದಲ್ಲಿ ಬಿಜೆಪಿ ಶಾಸಕರು ಇರುವುದರಿಂದ ಹಾಗೂ ಅವರ ಬ್ಯಾಂಕಿನ ಸಿಬ್ಬಂದಿಯೇ ಅಕ್ರಮದಲ್ಲಿ ತೊಡಗಿರುವುದರಿಂದ ತನಿಖೆ ದಾರಿತಪ್ಪಿಸುತ್ತಾರೆ ಎಂಬ ಆತಂಕ ಮತದಾರರನ್ನು ಕಾಡುತ್ತಿದೆ ಎಂದು ಹೇಳಿದ್ದಾರೆ.
ಅಧಿಕಾರಿಗಳು ಯಾರ ಕೈಗೊಂಬೆಯಾಗದೆ, ನಿಷ್ಪಕ್ಷಪಾತವಾಗಿ ತನಿಖೆ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.