ಎಂ.ಬಿ.ಪಾಟೀಲ
ವಿಜಯಪುರ: ಬಚಾವತ್ ಐತೀರ್ಪನ್ನು ಉಲ್ಲಂಘಿಸಿ ಮಹಾರಾಷ್ಟ್ರವು ಸುಮಾರು 50 ಟಿಎಂಸಿ ಅಡಿ ನೀರನ್ನು ಅಕ್ರಮವಾಗಿ ಸಂಗ್ರಹಿಸಿ, ಬಳಸಿಕೊಳ್ಳುತ್ತಿರುವುದರ ವಿರುದ್ಧ ಕೇಂದ್ರ ಜಲಶಕ್ತಿ ಸಚಿವಾಲಯದ ಪರಿಶೀಲನಾ ಸಮಿತಿ (ಸಿಡಬ್ಲ್ಯುಸಿ) ದೂರು ನೀಡಿ, ಕ್ರಮಕ್ಕೆ ಆಗ್ರಹಿಸಲಾಗುವುದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಮಾ, ಸೀನಾ ನದಿಗಳ ವ್ಯಾಪ್ತಿಯಲ್ಲಿ ಮಹಾರಾಷ್ಟ್ರವು ಅತಿಯಾಗಿ ನೀರು ಸಂಗ್ರಹ, ಬಳಕೆ ಮಾಡುತ್ತಿರುವುದರಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯದ ಕುಡಿಯುವ ನೀರಿನ ಯೋಜನೆ, ನೀರಾವರಿ ಯೋಜನೆಗಳು ನೀರಿನ ಕೊರತೆ ಅನುಭವಿಸುತ್ತಿವೆ ಎಂದು ಆರೋಪಿಸಿದರು.
ಕರ್ನಾಟಕದ ಗಮನಕ್ಕೆ ತಾರದೇ ಮಹಾರಾಷ್ಟ್ರವು ತನ್ನ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಭೀಮಾ ಮತ್ತು ಸೀನಾ ನದಿಗಳಿಗೆ ಮಳೆಗಾಲದಲ್ಲಿ ದಿಡೀರನೆ ಬಿಡುವುದರಿಂದ ರಾಜ್ಯದ ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುತ್ತಿದೆ. ಇದರಿಂದ ರಾಜ್ಯದ ಲಕ್ಷಾಂತರ ಹೆಕ್ಟೇರ್ ಬೆಳೆ ಹಾನಿ, ಜೀವ ಹಾನಿಗಳು ಉಂಟಾಗುತ್ತಿದೆ ಎಂದು ಆಪಾದಿಸಿದರು.
ಸಿಎಂ ವೈಮಾನಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.30ರಂದು ವಿಜಯಪುರ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.