
ಇಂಡಿ: ‘ಬಿಸಿಲು ಹೆಚ್ಚಾಗುತ್ತಿದೆ. ಬೇಸಿಗೆ ಆರಂಭಗೊಂಡಿದ್ದು ಪಟ್ಟಣವೂ ಸೇರಿದಂತೆ ಹಳ್ಳಿಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ನಗರದಲ್ಲಿ ಕುಡಿಯುವ ನೀರಿನ ಕುರಿತು ಶನಿವಾರ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಭೀಮಾ ನದಿಯಲ್ಲಿ ನೀರಿನ ಕೊರತೆ ಎದ್ದು ಕಾಣುತ್ತಿದೆ. ತಾಲ್ಲೂಕಿನಾದ್ಯಂತ ಅನೇಕ ಕೆರೆಗಳು ತುಂಬಲಾಗಿದೆ. ಶೇ55ರಿಂದ 60 ರಷ್ಟು ಕೆರೆಗಳಲ್ಲಿ ನೀರು ನಿಂತಿವೆ. ಮಹಾರಾಷ್ಟ್ರ ಸರ್ಕಾರ ಭೀಮಾನದಿಯಿಂದ ಕಳೆದ ಎರಡು ದಿನಗಳ ಹಿಂದೆ ಭೀಮಾನದಿಗೆ 4,100 ಕ್ಯೂಸೆಕ್ಸ್ ನೀರು ಬಿಡುಗಡೆಯಾಗಿದೆ. ಧೂಳಖೇಡ ಜಾಕವೇಲ್ ವೀಕ್ಷೆಣೆ ಮಾಡಿದ್ದೇನೆ ಎಂದ ಅವರು, ಬಹುತೇಕ ಕುಡಿಯುವ ನೀರಿನ ಸಮಸ್ಯೆ ಏದರಾಗದು’ ಎಂದರು.
ತಾಲ್ಲೂಕಿನ ಕೆರೆಗಳ ಭರ್ತಿ ಯಾವ ಕೆರೆಗೆ ನೀರಿನ ಪ್ರಮಾಣ ಎಷ್ಟು ಬೇಸಿಗೆಯಲ್ಲಿ ಯಾವ ಕೆರೆ ನೀರು ಬತ್ತುತ್ತದೆ ಎಂಬ ವಿಚಾರವಾಗಿ ಹಾಗೂ ಜಲಧಾರೆ ಯೋಜನೆ ಪ್ರಗತಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
‘ಕುಡಿಯುವ ನೀರಿನ ಸಮಸ್ಯೆಗೆ ಜಲಧಾರೆಯಿಂದ ಮಾತ್ರ ಪರಿಹಾರ ಸಾಧ್ಯ. ಅಧಿಕಾರಿಗಳು ಬೇಸಿಗೆ ಮುಗಿಯುವವರೆಗೂ ನೀರಿನ ಸಮಸ್ಯಯಾಗದಂತೆ ಕಾರ್ಯನಿರ್ವಹಿಸಬೇಕು’ ಎಂದರು.
ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.