ವಿಜಯಪುರ: ನಗರದ ಹೊರವಲಯದ ಅರಕೇರಿಯಲ್ಲಿರುವ ಇಂಡಿಯನ್ ರಿಸರ್ವ್ ಬಟಾಲಿಯನ್ ಆವರಣದಲ್ಲಿ ₹9.62 ಕೋಟಿ ಅನುದಾನದಲ್ಲಿ ನಿರ್ಮಿಸಲಾಗಿರುವ ನೂತನ ಆಡಳಿತ ಭವನವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದರು.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿಶನಿವಾರ ನಡೆದ ವರ್ಚ್ಯುವೆಲ್ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ಪೊಲೀಸರು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ದೇಶ ಯಶಸ್ವಿಯಾಗಿದೆ ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ಮುಂದಿನ ಅವಧಿಗೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸದಾನಂದಗೌಡ ಇದ್ದರು.
ಅರಕೇರಿ ಐಆರ್ಬಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ಬಿ.ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಕರ್ನಾಟಕ ಸಾವಯವ, ಬೀಜ ನಿಗಮದ ಅಧ್ಯಕ್ಷ ವಿಜುಗೌಡ ಪಾಟೀಲ, ಐಆರ್ಬಿ ವಿಜಯಪುರ ಘಟಕದ ಕಮಾಂಡೆಂಟ್ ಎಸ್.ಡಿ.ಪಾಟೀಲ, ಡೆಪ್ಯೂಟಿ ಕಮಾಂಡೆಂಟ್ ಬಿ.ಡಿ.ಲೋಕೇಶ್, ಅಸಿಸ್ಟೆಂಟ್ ಕಮಾಂಡೆಂಟ್ ಗುರುನಾಥ, ಶರಣಬಸವ, ಶರಣಬಸವ ಕೊಳಾರಿ, ರಾಚಪ್ಪ ಕಾಜಗಾರ, ವಿಶ್ವನಾಥ ನಾಯಕ ಹಾಗೂ ಇನ್ಸ್ಪೆಕ್ಟರ್, ಸಿಬ್ಬಂದಿ ಉಪಸ್ಥಿತರಿದ್ದರು.
ಗಮನ ಸೆಳೆದ ಮುಖಂಡರು:ಕಾರ್ಯಕ್ರಮದ ಮುಂದಿನ ಸಾಲಿನ ಆಸನದಲ್ಲಿ ಶಾಸಕ ಎಂ.ಬಿ.ಪಾಟೀಲ ಮತ್ತು ವಿಜುಗೌಡ ಪಾಟೀಲ ಪರಸ್ಪರ ದೂರ, ದೂರದಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ತಡವಾಗಿ ಬಂದ ಶಾಸಕ ಯತ್ನಾಳ ಅವರು ಎಂ.ಬಿ.ಪಾಟೀಲ ಪಕ್ಕದಲ್ಲಿ ಕುಳಿತರು. ಅಲ್ಲದೇ ಇಬ್ಬರು ನಾಯಕರು ಪರಸ್ಪರ ಚರ್ಚೆಯಲ್ಲಿ ಮುಳುಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.