ಸೋಲಾಪುರ: ಕರ್ನಾಟಕದ ಗಡಿಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹಾಗೂ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
ಅಕ್ಕಲಕೋಟೆಯ ಪ್ರಿಯದರ್ಶಿನಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಆದರ್ಶ ಕನ್ನಡ ಬಳಗ ಆಶ್ರಯದಲ್ಲಿ ಹಮ್ಮಿಕೊಂಡ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗಡಿನಾಡು ಕನ್ನಡ ಸಾಹಿತ್ಯ ಸಂಸ್ಕೃತಿ ಉತ್ಸವ ಹಾಗೂ ನಲಿ ಕಲಿ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಗಡಿ ಭಾಗದಲ್ಲಿ ಕನ್ನಡ ಭಾಷೆ ಹಸಿರಾಗಿರಬೇಕು. ಕಳೆದ 15 ವರ್ಷದಲ್ಲಿ ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಿಗೆ 44 ಕೋಣೆಗಳನ್ನು ಪ್ರಾಧಿಕಾರದಿಂದ ಕಟ್ಟಿಸಿದ್ದೇವೆ. ಈ ವರ್ಷದಿಂದ ಕನ್ನಡ ಶಾಲೆಗಳಿಗೆ ನಲಿ-ಕಲಿ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿದ್ದೇವೆ. ಶಿಕ್ಷಕರು ಮಕ್ಕಳಿಗೆ ಈ ಸಾಮಗ್ರಿಗಳ ಮೂಲಕ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ಅಭಿರುಚಿಯನ್ನು ಹೆಚ್ಚಿಸಲು ಅನುಕೂಲವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಕ್ಕಲಕೋಟೆ ವಿರಕ್ತಮಠದ ಬಸವಲಿಂಗ ಸ್ವಾಮೀಜಿ, ಅಧ್ಯಕ್ಷ ಎಸ್.ಕೆ ಬಿರಾದಾರ, ಅಕ್ಕಲಕೋಟೆ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಆದರ್ಶ ಕನ್ನಡ ಬಳಗದ ಅಧ್ಯಕ್ಷ ಮಲಿಕ್ ಜಾನ್ ಶೇಖ, ಮಹಾರಾಷ್ಟ್ರ ಘಟಕದ ಕಸಾಪ ಅಧ್ಯಕ್ಷ ಸೋಮಶೇಖರ ಜಮಶೆಟ್ಟಿ, ಸಾಹಿತಿ ಬಿ.ಬಿ ಪೂಜಾರಿ, ಗಿರೀಶ ಜಕಾಪುರೆ, ಅಕ್ಕಲಕೋಟ ಸ್ವಾಮಿ ಸಮರ್ಥ ಅನ್ನ ಛತ್ರ ಮಂಡಳಿಯ ಅಮೋಲರಾಜೆ ಭೋಸಲೆ, ಶಿವಾನಂದ ಗೋಗಾಂವ, ಶಿಕ್ಷಕರು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಯಾದವಾಡ, ಶರಣಪ್ಪ ಪುಲಾರಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಆರ್.ಎಸ್ ನಾಯಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.