
ವಿಜಯಪುರ: ಜನ ಪರವಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಬೊಕ್ಕಸ ಖಾಲಿ ಆಗಿಲ್ಲ, ಬದಲಿಗೆ ಆರ್ಥಿಕ ಬಲವರ್ಧನೆಯಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಶನಿವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯು ಶೇ 92ರಷ್ಟು ಕುಟುಂಬಗಳಿಗೆ ತಲುಪಿದೆ. ಪ್ರತಿ ತಿಂಗಳು ಪ್ರತಿ ಫಲಾನುಭವಿ ಕುಟುಂಬವೊಂದಕ್ಕೆ ₹1 ಲಕ್ಷ ಅನುಕೂಲವಾಗುತ್ತಿದೆ ಎಂದರು.
ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಸೇವೆ ಒದಗಿಸಿರುವುದರಿಂದ ಕೆಎಸ್ಆರ್ಟಿಸಿ ಲಾಭ ಗಳಿಸತೊಡಗಿದೆ. ಪ್ರತಿ ತಿಂಗಳು ಮಹಿಳೆಯರಿಗೆ ₹2 ಸಾವಿರ ನಗದು ನೀಡುತ್ತಿರುವುದರಿಂದ ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಗೃಹ ಜ್ಯೋತಿ ಯೋಜನೆಯು ಶೇ 90ರಷ್ಟು ಕುಟುಂಬಗಳಿಗೆ ಲಾಭವಾಗಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಬೊಕ್ಕಸಕ್ಕೆ ನಯಾ ಪೈಸೆ ಹೊರೆಯಾಗಿಲ್ಲ. ಬದಲಿಗೆ ಹಿಂದಿನ ಬಿಜೆಪಿ ಸರ್ಕಾರವು ಕೊನೇ ಅವಧಿಯಲ್ಲಿ ಬಜೆಟ್ ಅನುಮೋದನೆ ಇಲ್ಲದೇ ಮಾಡಿದ ₹37 ಲಕ್ಷ ಕೋಟಿ ಮೊತ್ತದ ವಿವಿಧ ಯೋಜನೆಗಳ ಹೊರೆಯನ್ನು ನಮ್ಮ ಸರ್ಕಾರದ ಮೇಲೆ ಮುಂಚಿತವಾಗಿ ಹೊರಿಸಿ ಹೋಗಿದ್ದರು ಎಂದರು.
ರಾಜಕೀಯ ಲಾಭಕ್ಕಾಗಿ ಅಥವಾ ವೋಟಿಗಾಗಿ ಮಾಡಿದ ಯೋಜನೆ ಅಲ್ಲ, ಬಡವರ ಕಲ್ಯಾಣ ಕಾರ್ಯಕ್ರಮ ಇವಾಗಿವೆ. ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳು ನೆನೆಪಿಟ್ಟು ಸದಾ ಸ್ಮರಿಸಬೇಕು ಎಂದು ತಿಳಿಸಿದರು.
ವಿಜಯಪುರ ಜಿಲ್ಲೆಯೊಂದಕ್ಕೆ ಸುಮಾರು ₹4 ಸಾವಿರ ಕೋಟಿ ಅನುದಾನ ಗ್ಯಾರಂಟಿ ಯೋಜನೆಗೆ ವಿನಿಯೋಗವಾಗಿದೆ. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂದಿಗೂ ನಿಲ್ಲುವುದಿಲ್ಲ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ, ಸರ್ವರಿಗೆ ಸಮಪಾಲು, ಸರ್ವರಿಗೆ ಸಮಬಾಳು ಎಂಬ ನಮ್ಮ ಸಂವಿಧಾನದ ಆಶಯವನ್ನು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಡೇರಿಸಿದೆ. ದೇಶದಲ್ಲಿ ಸದ್ಯ ಇರುವುದು ಗುಜರಾತ್ ಮಾಡೆಲ್ ಅಲ್ಲ, ಕರ್ನಾಟಕ ಗ್ಯಾರಂಟಿ ಮಾಡೆಲ್ ಆಗಿದೆ ಎಂದರು.
ಪ್ರಗತಿಪರ ಚಿಂತಕ ಡಾ.ಕೆ.ವಾಸು ಮಾತನಾಡಿ, ಜನಸಾಮಾನ್ಯರ ಕೈಗೆ ರಾಜ್ಯ ಸರ್ಕಾರ ಹಣ ಕೊಟ್ಟಿರುವುದರಿಂದ ರಾಜ್ಯದ ಜನರ ಆದಾಯ ಹೆಚ್ಚಳವಾಗಿದೆ. ಸರ್ಕಾರಕ್ಕೆ ಬರುವ ತೆರಿಗೆ ಹೆಚ್ಚಳವಾಗಿದೆ ಎಂದು ಪ್ರತಿಪಾದಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಸರ್ಕಾರ ದಿವಾಳಿ ಆಗಿಲ್ಲ, ಇದು ಬಿಟ್ಟಿ ಭಾಗ್ಯ ಅಲ್ಲ, ಜನರನ್ನು ಸೋಮಾರಿ ಮಾಡಲ್ಲ, ಇದು ಜನರ ಹಕ್ಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷ ಎಸ್.ಆರ್.ಪಾಟೀಲ ಬ್ಯಾಡಗಿ, ಶಾಸಕ ಅಶೋಕ ಮನಗೂಳಿ, ವಿಧಾನ ಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ್, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ್ ಬೋರಾಮಣಿ, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್ ಇದ್ದರು.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನೇ ಜನಮಾನಸದಿಂದ ಮರೆಸುವ ಕೆಲಸವನ್ನು ಬಿಜೆಪಿ ಪ್ರಧಾನಮಂತ್ರಿ ಮಾಡುತ್ತಿದ್ದಾರೆ.- ಸಿ.ಎಸ್.ನಾಡಗೌಡ, ಶಾಸಕ
ದೇಶದಲ್ಲಿ ನುಡಿದಂತೆ ನಡೆದ ಏಕೈಕ ಸರ್ಕಾರ ಕರ್ನಾಟಕ ಕಾಂಗ್ರೆಸ್ ಸರ್ಕಾರವಾಗಿದೆ. ನುಡಿದಂತೆ ನಡೆಯದ ಸರ್ಕಾರ ಕೇಂದ್ರ ಬಿಜೆಪಿ ಸರ್ಕಾರವಾಗಿದೆ.- ಪುಷ್ಪಾ ಅಮರನಾಥ, ಉಪಾಧ್ಯಕ್ಷೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.